ನವದೆಹಲಿ: ಕೋಟ್ಯಂತರ ರೂಪಾಯಿ ಬ್ಯಾಂಕ್ ಸಾಲ ವಂಚನೆಗೆ ಸಂಬಂಧಿಸಿ ದಾಖಲಾಗಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧಿಸಿದಂತೆ ರಿಲಯನ್ಸ್ ಸಮೂಹದ ಅಧ್ಯಕ್ಷ ಅನಿಲ್ ಅಂಬಾನಿ ಅವರು ಇಂದು (ಮಂಗಳವಾರ) ಜಾರಿ ನಿರ್ದೇಶನಾಲಯದ (ಇ.ಡಿ) ವಿಚಾರಣೆಗೆ ಹಾಜರಾಗಿದ್ದಾರೆ.
ದೆಹಲಿಯಲ್ಲಿರುವ ಇ.ಡಿ ಕಚೇರಿಗೆ ಬೆಳಿಗ್ಗೆ 10:50ಕ್ಕೆ 66 ವರ್ಷದ ಉದ್ಯಮಿ ಅನಿಲ್ ಅಂಬಾನಿ ಅವರು ಆಗಮಿಸಿದ್ದರು. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಅನಿಲ್ ಅವರ ಹೇಳಿಕೆಗಳನ್ನು ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
₹3 ಸಾವಿರ ಕೋಟಿ ಮೊತ್ತದ ಬ್ಯಾಂಕ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಅನಿಲ್ ಅಂಬಾನಿ ಒಡೆತನದ 50ಕ್ಕೂ ಹೆಚ್ಚು ಕಂಪನಿಗಳ ಮುಂಬೈ ಮತ್ತು ದೆಹಲಿಯಲ್ಲಿನ ಕಚೇರಿಗಳ ಮೇಲೆ ಜುಲೈ 24 ರಂದು ಏಕಕಾಲದಲ್ಲಿ ದಾಳಿ ನಡೆಸಿತ್ತು. ಇದರ ಬೆನ್ನಲ್ಲೇ ಆಗಸ್ಟ್ 5ರಂದು ವಿಚಾರಣೆಗೆ ಹಾಜರಾಗುವಂತೆ ಅನಿಲ್ ಅಂಬಾನಿ ಅವರಿಗೆ ಇ.ಡಿ ಸಮನ್ಸ್ ಜಾರಿ ಮಾಡಿತ್ತು.
ಅನಿಲ್ ಅಂಬಾನಿ ಸಮೂಹ ಸಂಸ್ಥೆಗಳಿಗೆ ನಿಯಮ ಉಲ್ಲಂಘಿಸಿ, ಅಕ್ರಮವಾಗಿ ಸಾಲ ಮಂಜೂರು ಮಾಡಿದ ಆರೋಪದಲ್ಲಿ ಯೆಸ್ ಬ್ಯಾಂಕ್ ಮೇಲೂ ಇ.ಡಿ ದಾಳಿ ನಡೆದಿತ್ತು. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್ಎ) ದಾಳಿ ನಡೆದಿದ್ದು, ಮುಂಬೈ ಮತ್ತು ದೆಹಲಿಯಲ್ಲಿ 25ಕ್ಕೂ ಹೆಚ್ಚು ವ್ಯಕ್ತಿಗಳು ಮತ್ತು 35ಕ್ಕೂ ಹೆಚ್ಚು ಸ್ಥಳಗಳನ್ನು ಗುರಿಯಾಗಿಸಿ ಕಾರ್ಯಾಚರಣೆ ನಡೆಸಿತ್ತು.
ಅನಿಲ್ ಅಂಬಾನಿ ಸಮೂಹ ಸಂಸ್ಥೆಗಳಿಗೆ 2017-19ರ ಅವಧಿಯಲ್ಲಿ ಯೆಸ್ ಬ್ಯಾಂಕ್ ಮೂಲಕ ಅಕ್ರಮವಾಗಿ ₹3 ಸಾವಿರ ಕೋಟಿಯಷ್ಟು ಸಾಲ ವಿತರಿಸಲಾಗಿದೆ. ಈ ಸಾಲ ಮಂಜೂರಾದ ಕೂಡಲೇ, ಬ್ಯಾಂಕ್ನ ಪ್ರವರ್ತಕರ ಖಾತೆಗೂ ಹಣ ಸಂದಾಯ ಆಗಿರುವುದನ್ನು ಇ.ಡಿ ಪತ್ತೆ ಹಚ್ಚಿದೆ. ಅಕ್ರಮವಾಗಿ ಸಾಲ ಮಂಜೂರು ಮಾಡಿರುವುದು ಮತ್ತು ಇದಕ್ಕಾಗಿ ಲಂಚ ಪಡೆದಿರುವ ಬಗ್ಗೆಯೂ ತನಿಖೆ ಮುಂದುವರಿದಿದೆ. ಸಾಲ ಮಂಜೂರಾತಿ ಸಂದರ್ಭದಲ್ಲಿ ಯೆಸ್ ಬ್ಯಾಂಕ್ 'ಗಂಭೀರ ನಿಯಮ ಉಲ್ಲಂಘನೆ' ಮಾಡಿರುವುದು ಕಂಡು ಬಂದಿದೆ ಎಂದು ಇ.ಡಿ. ಹೇಳಿದೆ.




