HEALTH TIPS

ಮತ ಕಳವು | ನಾಳೆ 'ಇಂಡಿಯಾ' ಬಣದಿಂದ ಚುನಾವಣಾ ಆಯೋಗ ಕಚೇರಿಗೆ ಪಾದಯಾತ್ರೆ

ನವದೆಹಲಿ: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ನಡೆಸುವ ಮೂಲಕ ಮತಗಳನ್ನು ಕಳವು ಮಾಡಲಾಗುತ್ತಿದೆ ಎಂದು ಆರೋಪಿಸಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ 'ಇಂಡಿಯಾ' ಮೈತ್ರಿಕೂಟದ ಸಂಸದರು ಸೋಮವಾರ ಸಂಸತ್ತಿನಿಂದ ಚುನಾವಣಾ ಆಯೋಗದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ 'ಇಂಡಿಯಾ' ಮೈತ್ರಿಕೂಟದ ಸಂಸದರಿಗೆ ಭೋಜನ ಕೂಟವನ್ನು ಆಯೋಜಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

'ಇಂಡಿಯಾ' ಮೈತ್ರಿಕೂಟದ ಸಂಸದರು ಬೆಳಿಗ್ಗೆ 11:30ಕ್ಕೆ ಸಂಸತ್ತಿನಿಂದ ಪ್ರತಿಭಟನಾ ಮೆರವಣಿಗೆಯನ್ನು ಆರಂಭಿಸಲಿದ್ದು, 300 ಸಂಸದರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಮೂಲಗಳು ಹೇಳಿವೆ.

ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಕರ್ನಾಟಕದ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಲಕ್ಷ ಮತಗಳು ಕಳ್ಳತನವಾಗಿವೆ ಎಂದು ದಾಖಲೆಗಳನ್ನು ಬಿಡುಗಡೆಗೊಳಿಸಿದ್ದರು. ಇದರ ಬೆನ್ನಲ್ಲೇ ವಿಪಕ್ಷ ನಾಯಕರು ಪ್ರತಿಭಟನಾ ಮೆರವಣಿಗೆ ನಡೆಸಲು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.

2024ರ ಲೋಕಸಭೆ ಚುನಾವಣಾ ಫಲಿತಾಂಶ ಬಂದ ನಂತರ ಸಂಸತ್ತಿನ ಹೊರಗೆ ನಡೆಯುತ್ತಿರುವ 'ಇಂಡಿಯಾ' ಮೈತ್ರಿಕೂಟದ ಮೊದಲ ಜಂಟಿ ಪ್ರತಿಭಟನೆ ಇದಾಗಿದ್ದು, ಎಎಪಿ ಕೂಡಾ ಬೆಂಬಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದೇ 8ರಂದು ನಡೆಯಬೇಕಿದ್ದ ಈ ಪ್ರತಿಭಟನಾ ಸಮಾವೇಶವನ್ನು ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ನಿಧನದ ಕಾರಣಕ್ಕೆ ಮುಂದೂಡಲಾಗಿತ್ತು. ಚುನಾವಣೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಗಮನಸೆಳೆಯಲು ಹೋರಾಟದ ರೂಪುರೇಷೆ ಸಿದ್ಧಪಡಿಸುವ ಕುರಿತು ಸಭೆಯಲ್ಲಿ ಪಕ್ಷದ ನಾಯಕರು ಚರ್ಚೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries