ನವದೆಹಲಿ: ಮತಾಂತರ ವಿರೋಧಿ ಕಾನೂನುಗಳಿಗೆ ತಡೆ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ನಿಲುವು ತಿಳಿಸುವಂತೆ ಸುಪ್ರೀಂ ಕೋರ್ಟ್ ಹಲವು ರಾಜ್ಯಗಳಿಗೆ ಮಂಗಳವಾರ ನೋಟಿಸ್ ಜಾರಿಗೊಳಿಸಿದೆ.
ರಾಜ್ಯಗಳಿಂದ ಪ್ರತಿಕ್ರಿಯೆ ಬಂದ ಬಳಿಕ ಈ ಅರ್ಜಿಯಲ್ಲಿನ ಕೋರಿಕೆಯನ್ನು ಪರಿಗಣಿಸುವುದಾಗಿ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ, ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ಅವರ ಪೀಠವು ತಿಳಿಸಿತು.
ರಾಜ್ಯಗಳಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ನೀಡಿದ ಪೀಠವು, ನಂತರದ ಎರಡು ವಾರಗಳಲ್ಲಿ ಅರ್ಜಿದಾರರು ಪ್ರತ್ಯುತ್ತರ ಸಲ್ಲಿಸಬಹುದು ಎಂದು ತಿಳಿಸಿ ವಿಚಾರಣೆಯನ್ನು ಆರು ವಾರಗಳವರೆಗೆ ಮುಂದೂಡಿತು.
ಉತ್ತರ ಪ್ರದೇಶ, ಮಧ್ಯಪ್ರದೇಶ, ಕರ್ನಾಟಕ, ಹಿಮಾಚಲ ಪ್ರದೇಶ, ಉತ್ತರಾಖಂಡ, ಛತ್ತೀಸಗಢ, ಗುಜರಾತ್, ಹರಿಯಾಣ, ಜಾರ್ಖಂಡ್ ರಾಜ್ಯಗಳಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧಿ ಕಾನೂನುಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಪೀಠ ವಿಚಾರಣೆ ನಡೆಸುತ್ತಿದೆ.

