ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆ ಹಿನ್ನಲೆ ಬಿಜೆಪಿ ಚುನಾವಣಾ ತಂತ್ರಗಳನ್ನು ರೂಪಿಸುತ್ತಿದ್ದು ಇದರ ಭಾಗವಾಗಿ ರಾಜ್ಯಕ್ಕೆ ಭೇಟಿ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಿನ್ನೆ (ಶುಕ್ರವಾರ) ಸಿಎಂ ನಿತೀಶ್ ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.
ಭೇಟಿ ವೇಳೆ ಅಮಿತ್ ಶಾ ಮತ್ತು ನಿತೀಶ್ ಕುಮಾರ್ ಅವರು ಚುನಾವಣಾ ಪ್ರಚಾರ ತಂತ್ರ ಹಾಗೂ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಮೂರು ದಿನಗಳ ರಾಜ್ಯ ಪ್ರವಾಸದಲ್ಲಿರುವ ಅಮಿತ್ ಶಾ ಅವರು ಗುರುವಾರ ಸಂಜೆ ರಾಜ್ಯಕ್ಕೆ ಭೇಟಿ ನೀಡಿದ್ದಾರೆ.
ಈ ಬಾರಿ ಬಿಜೆಪಿ ಹಾಗೂ ಜೆಡಿ(ಯು) ಮೈತ್ರಿ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ನಿತೀಶ್ ಕುಮಾರ್ ಅವರನ್ನೇ ಮುಖ್ಯಮಂತ್ರಿ ಮಾಡುವೀರಾ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಶಾ, ಹಾಗೆ ಮಾಡಲು ನಾನು ಯಾರು? ಒಂದು ಕಾರ್ಯವಿಧಾನವಿದೆ. ಶಾಸಕಾಂಗ ಸದಸ್ಯರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಈ ಬಾರಿ ಚುನಾವಣೆಯಲ್ಲಿ ನಿತೀಶ್ ನೇತೃತ್ವದಲ್ಲಿ ಎನ್ಡಿಎ ಸ್ಪರ್ಧಿಸುತ್ತಿದೆ ಎಂದು ಹೇಳಿದ್ದೇವೆ, ಆ ಬಗ್ಗೆ ಸಂದೇಹವಿಲ್ಲ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಆಯ್ಕೆಯಲ್ಲಿ ಮಹಾರಾಷ್ಟ್ರದಲ್ಲಿ ಆದ ರೀತಿ ಬಿಹಾರದಲ್ಲೂ ಆಗುತ್ತದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಶಾ, ಸುದ್ದಿ ವಾಹಿನಿಗಳಿಗೆ ಟಿಆರ್ಪಿ ಸಿಗುವ ರೀತಿಯಲ್ಲಿ ರಾಜಕೀಯ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

