HEALTH TIPS

ಕಾಸರಗೋಡಿನ ಕನ್ನಡಿಗರ ಸಮಸ್ಯೆ ಪರಿಹರಿಸುವಂತೆ ಗಡಿನಾಡ ಕನ್ನಡಿಗರ ನಿಯೋಗದಿಂದ ಮನವಿ

ಬೆಂಗಳೂರು: ರಾಜ್ಯ ಸರ್ಕಾರವು ಅಖಂಡ ಕರ್ನಾಟಕದ ಭಾಗವಾಗಿದ್ದ ಎಲ್ಲ ಪ್ರದೇಶಗಳೊಂದಿಗೆ ಭಾವನಾತ್ಮಕ ಸಂಪರ್ಕವನ್ನು ಹೊಂದುವಲ್ಲಿ ವಿಶೇಷ ಕ್ರಿಯಾ ಯೋಜನೆ ರಚಿಸುವುದು ಅನಿವಾರ್ಯ ಎಂಬುದಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.

ಅವರು ಕಾಸರಗೋಡಿನ ಕನ್ನಡಿಗರ ಬೇಡಿಕೆಗಳನ್ನು ಪರಿಗಣಿಸುವ ನಿಟ್ಟಿನಲ್ಲಿ ಗಡಿನಾಡು ಕಾಸರಗೋಡಿನ ಕನ್ನಡಿಗರ ನಿಯೋಗವನ್ನು ಬೆಂಗಳೂರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ ಶಿವರಾಜ್ ತಂಗಡಗಿ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಮತ್ತು ಮಾನ್ಯ ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳನ್ನು ಭೇಟಿಯಾಗಿಸಿದ ನಂತರ ಮಾತನಾಡಿದರು.


ಕರ್ನಾಟಕ ರಾಜ್ಯವು ಇದೇ ಮೊದಲ ಬಾರಿಗೆ ಗಡಿ ಭಾಗಗಳ ಸಮಸ್ಯೆಗಳನ್ನು ಅವಲೋಕಿಸಿ ಶಾಶ್ವತ ಪರಿಹಾರವನ್ನು ಕಲ್ಪಿಸುವ ನಿಟ್ಟಿನಲ್ಲಿ ಗಡಿ ಉಸ್ತುವಾರಿ ಸಚಿವರನ್ನೇ ನೇಮಿಸಿದ್ದು, ರಾಜ್ಯ ಸರ್ಕಾರವು ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನಿರಿಸಿದೆ. ಗಡಿಉಸ್ತುವಾರಿಸಚಿವರು ಕಾಸರಗೋಡು, ಸಾಂಗ್ಲಿ, ಸೊಲ್ಲಾಪುರದಂತಹ ಅಚ್ಚ ಕನ್ನಡ ಪ್ರದೇಶಗಳಲ್ಲಿ ವಾಸಿಸುವ ಕನ್ನಡಿಗರ ಸಮಗ್ರ ಹಿತಕ್ಕೆ ಮುಂದಾದಲ್ಲಿ ಅಖಂಡ ಕರ್ನಾಟಕ ತನ್ನ ಸಾಂಸ್ಕೃತಿಕ ಅಸ್ತಿತ್ವವನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿದೆ  

ಕನ್ನಡ ಮತ್ತು ಕರ್ನಾಟಕ ಸಂಸ್ಕೃತಿಗೆ ದುಡಿದ ಗಡಿನಾಡು ಪ್ರತಿಭೆಗಳಿಗೆ ಸೂಕ್ತ ಪ್ರಶಸ್ತಿ ನೀಡಬೇಕು, ಕಾಸರಗೋಡಿನ ಸಾಂಸ್ಕೃತಿಕ ಸ್ಮಾರಕಗಳ ನಿರ್ಮಾಣ ಮತ್ತು ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು,   ಕಾಸರಗೋಡಿನ ಕನ್ನಡ ಮಾಧ್ಯಮ ಶಾಲೆಗಳ ಅಭಿವೃದ್ಧಿಗಾಗಿ ಕರ್ನಾಟಕ ಸರ್ಕಾರ ಅನುದಾನ ನೀಡಬೇಕು, ಕಾಸರಗೋಡಿನಲ್ಲಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳನ್ನು ಕರ್ನಾಟಕದ ವಿದ್ಯಾರ್ಥಿಗಳಂತೆಯೇ ಸಮಾನವಾಗಿ ಪರಿಗಣಿಸಬೇಕು ಎಂಬ ಮನವಿಯನ್ನು ಕಾಸರಗೋಡಿನ ನಿಯೋಗ ಪುರುಷೋತ್ತಮ ಬಿಳಿಮಲೆ ಅವರಿಗೆ ಸಲ್ಲಿಸಲಾಗಿದ್ದು,  ಮುಖ್ಯಮಂತ್ರಿ, ಗಡಿ ಸಚಿವರು,  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಸಲ್ಲಿಸಿ ಮುಂಬರುವ ಆಯವ್ಯಯದಲ್ಲಿ ಹೆಚ್ಚಿನ ಹಣ ಮೀಸಲಿಡಲು ಆಗ್ರಹಿಸಲಾಗುವುದು ಎಂದು ಬಿಳಿಮಲೆ ತಿಳಿಸಿದರು.

ನಿಯೋಗದಲ್ಲಿ ಕನ್ನಡ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸೋಮಣ್ಣ ಬೇವಿನಮರದ, ಹಿರಿಯ ಪತ್ರಕರ್ತ ಶಿವಸುಬ್ರಹ್ಮಣ್ಯ ಕಲ್ಮಡ್ಕ, ಕೇರಳ ಘಟಕದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಗೌರವ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ, ಕಾಸರಗೋಡಿನ ಗಮಕ ಕಲಾ ಪರಿಷತ್ತಿನ ಅಧ್ಯಕ್ಷ ತೆಕ್ಕೆಕೆರೆ ಶಂಕರನಾರಾಯಣ ಭಟ್, ನಿವೃತ್ತ ಪ್ರಾಧ್ಯಾಪಕಿ ಡಾ. ಪ್ರಮೀಳ ಮಾಧವ್, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಡಾ. ಸಂತೋಷ ಹಾನಗಲ್ಲ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ ಮೊದಲಾದವರು ಉಪಸ್ಥಿತರಿದ್ದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries