ಕೋಲ್ಕತ್ತ: 'ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರಿಗೆ ಗುರುವಾರ ರಾತ್ರಿ ಜೀವ ಬೆದರಿಕೆ ಇ-ಮೇಲ್ ಬಂದಿದ್ದು, ಭದ್ರತೆ ಬಿಗಿಗೊಳಿಸಲಾಗಿದೆ' ಎಂದು ಲೋಕ ಭವನದ ಹಿರಿಯ ಅಧಿಕಾರಿಗಳು ಹೇಳಿದ್ದಾರೆ.
'ಕೊಲೆ ಬೆದರಿಕೆ ಒಡ್ಡಿದ್ದಲ್ಲದೇ ಇ-ಮೇಲ್ನಲ್ಲಿ ಆರೋಪಿಯು ತನ್ನ ಮೊಬೈಲ್ ಸಂಖ್ಯೆಯನ್ನೂ ಹಾಕಿದ್ದಾನೆ.
ಆತನನ್ನು ತಕ್ಷಣ ಬಂಧಿಸುವಂತೆ ಡಿಜಿಪಿ ಅವರಿಗೆ ಮಾಹಿತಿ ನೀಡಿದ್ದೇವೆ' ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ಈ ಕುರಿತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮಾಹಿತಿ ನೀಡಲಾಗಿದೆ. ಕೇಂದ್ರ ಗೃಹ ಸಚಿವಾಲಯಕ್ಕೂ ವರದಿ ಮಾಡಲಾಗಿದೆ. ರಾಜ್ಯಪಾಲರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಪೊಲೀಸರು ಮತ್ತು ಸಿಆರ್ಪಿಎಫ್ ಒಟ್ಟಾಗಿ ಕೆಲಸ ಮಾಡುತ್ತಿವೆ' ಎಂದು ತಿಳಿಸಿದ್ದಾರೆ.
ಝಡ್-ಪ್ಲಸ್ ಭದ್ರತೆಯನ್ನು ಹೊಂದಿರುವ ಬೋಸ್ ಅವರ ಸುರಕ್ಷತೆಗೆ 60-70 ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

