ನವದೆಹಲಿ: ಈ ಬಾರಿಯ ಕೇಂದ್ರ ಬಜೆಟ್ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುವ ಮೂಲಕ ವಿಕಸಿತ ಭಾರತ ನಿರ್ಮಾಣಕ್ಕೆ ಸ್ಪಷ್ಟ ಮಾರ್ಗಸೂಚಿಯನ್ನು ಒದಗಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ ಸತತ 9ನೇ ಬಾರಿಗೆ ಬಜೆಟ್ ಅನ್ನು ಮಂಡಿಸಿದ್ದಾರೆ.
ಕೇಂದ್ರ ಬಜೆಟ್ ಕುರಿತು ಪ್ರಧಾನಿ ಮೋದಿ ಅವರು ಪ್ರತಿಕ್ರಿಯಿಸಿದ್ದು, 'ಇದು ಹಣಕಾಸಿನ ಕೊರತೆಯನ್ನು ಕಡಿಮೆ ಮಾಡುವುದು, ಹಣದುಬ್ಬರವನ್ನು ನಿಯಂತ್ರಣಕ್ಕೆ ತರುವತ್ತ ಗಮನಹರಿಸಿದ ವಿಶೇಷ ಬಜೆಟ್ ಆಗಿದೆ. ಅದೇ ರೀತಿ ಬಂಡವಾಳ ಹೂಡಿಕೆ ಮತ್ತು ಅಭಿವೃದ್ಧಿಗೆ ಪೂರವಾಗಿದೆ. ಯುವ ಜನತೆಗೆ ಮುಕ್ತ ಅವಕಾಶವನ್ನು ಒದಗಿಸುತ್ತದೆ' ಎಂದು ಹೇಳಿದ್ದಾರೆ.
'ಈ ಬಾರಿಯ ಬಜೆಟ್ 2047ರ ವಿಕಸಿತ ಭಾರತ ನಿರ್ಮಾಣಕ್ಕೆ ಭದ್ರ ಅಡಿಪಾಯವಾಗಲಿದೆ. 'ಮೇಕ್ ಇನ್ ಇಂಡಿಯಾ' ಮತ್ತು 'ಆತ್ಮನಿರ್ಭರ ಭಾರತ' ಅಭಿಯಾನಕ್ಕೆ ಹೊಸ ವೇಗವನ್ನು ನೀಡುವ ಮಹತ್ವಾಕಾಂಕ್ಷೆಯ ಮಾರ್ಗಸೂಚಿಯನ್ನು ರೂಪಿಸಲಾಗಿದೆ. ಈ ಬಜೆಟ್ನಲ್ಲಿ ಹೊಸ ಮತ್ತು ಉದಯೋನ್ಮುಖ ಕೈಗಾರಿಕೆಗಳ ವಲಯಕ್ಕೆ ಉತ್ತಮ ಬೆಂಬಲ ನೀಡಲಿದ್ದು, ಇದೊಂದು ಅಭೂತಪೂರ್ವ ಬಜೆಟ್ ಆಗಿದೆ' ಎಂದಿದ್ದಾರೆ.
ಈ ಬಾರಿಯ ಬಜೆಟ್ ಭಾರತದ ಜಾಗತಿಕ ಪಾತ್ರವನ್ನು ಮತ್ತಷ್ಟು ಬಲಪಡಿಸುತ್ತದೆ. ಭಾರತ ಸಾಧ್ಯವಾದಷ್ಟು ಬೇಗ ಮೂರನೇ ಅತಿದೊಡ್ಡ ಜಾಗತಿಕ ಆರ್ಥಿಕತೆಯಾಗಬೇಕು ಎಂಬುದು 140 ಕೋಟಿ ಜನರ ಬಯಕೆಯಾಗಿದೆ. ವಿಶ್ವದಲ್ಲಿ ವಿಶ್ವಾಸಾರ್ಹ, ಗುಣಮಟ್ಟದ ಪೂರೈಕೆದಾರನಾಗಿ ಭಾರತ ತನ್ನ ಪಾತ್ರವನ್ನು ಯಶಸ್ವಿಯಾಗಿ ವಿಸ್ತರಿಸುತ್ತಿದೆ. ಈಚೆಗೆ ಸಹಿ ಹಾಕಲಾದ ಭಾರತ ಮತ್ತು ಐರೋಪ್ಯ ಒಕ್ಕೂಟದ (ಇ.ಯು) ನಡುವಿನ ಮುಕ್ತ ವ್ಯಾಪಾರ ಒಪ್ಪಂದದಿಂದ ದೇಶದ ಯುವ ಜನರು, ಸಣ್ಣ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳಿಗೆ ಹೆಚ್ಚು ಪ್ರಯೋಜನವಾಗಲಿದೆ ಎಂದೂ ಮೋದಿ ವಿವರಿಸಿದ್ದಾರೆ.

