ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ನೋಟಿಸ್ ಸಲ್ಲಿಸಿದ್ದಕ್ಕಾಗಿ ಆಡಳಿತರೂಢ ಬಿಜೆಪಿ ಮಂಗಳವಾರ ಪ್ರತಿಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅನ್ನು ರಾಜಕೀಯದಿಂದಲೇ "ಪದಚ್ಯುತಿಗೊಳಿಸುವ" ಸಮಯ ಬಂದಿದೆ ಎಂದು ಹೇಳಿದೆ.
ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕಾಂಗ್ರೆಸ್ ನೋಟಿಸ್ ಸಲ್ಲಿಸಿದ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ಅವರು, "ತಮ್ಮದೇ ತಪ್ಪುಗಳಿಂದಾಗಿ ಜನರಿಂದ ತಿರಸ್ಕೃತಗೊಂಡವರು, ಈಗ ಸಾಂವಿಧಾನಿಕ ಹುದ್ದೆಯಲ್ಲಿ ಇರುವವರನ್ನು ಪದಚ್ಯುತಗೊಳಿಸಲು ಬಯಸುತ್ತಿದ್ದಾರೆ" ಎಂದು ವ್ಯಂಗ್ಯವಾಡಿದರು.
ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಬಿಜೆಪಿ-ಎನ್ಡಿಎ ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದಾಗಿನಿಂದ ಅಮೆರಿಕ ಮೂಲದ ಬಿಲಿಯನೇರ್ ಜಾರ್ಜ್ ಸೊರೊಸ್ ಅವರ ಆದೇಶದ ಮೇರೆಗೆ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಸಾಂವಿಧಾನಿಕ ಸಂಸ್ಥೆಗಳು ಮತ್ತು ಹುದ್ದೆಗಳ ಮೇಲೆ ದಾಳಿ ಮಾಡುತ್ತಿವೆ ಎಂದು ಬಿಜೆಪಿ ಆರೋಪಿಸಿದೆ.
ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವು ಸದನದಲ್ಲಿ ನಡೆದುಕೊಳ್ಳುತ್ತಿರುವ ರೀತಿಯನ್ನು ಇಡೀ ದೇಶ ಗಮನಿಸುತ್ತಿದೆ. ರಾಹುಲ್ ಸೂಚನೆಯ ಮೇರೆಗೆ ಪ್ರಧಾನಿ ಮೋದಿ ಅವರಿಗೆ ಘೇರಾವ್ ಹಾಕುವ ಮೂಲಕ ಅವರನ್ನು ಅವಮಾನಿಸುವ ಸಂಚು ರೂಪಿಸಲಾಗಿತ್ತು ಎಂದು ಸಂಬಿತ್ ಪಾತ್ರಾ ಆರೋಪಿಸಿದರು.
ಇದು ಯಾವ ರೀತಿಯ ಚಿಂತನೆ? ಇಡೀ ದೇಶ ಈಗ ಇದರ ಬಗ್ಗೆ ಯೋಚಿಸಬೇಕಾಗಿದೆ. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವನ್ನು ರಾಜಕೀಯದಿಂದಲೇ ದೂರ ಮಾಡುವ ಕಾಲ ಸನ್ನಿಹಿತವಾಗಿದೆ" ಎಂದು ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸಂಬಿತ್ ಪಾತ್ರಾ ಹೇಳಿದ್ದಾರೆ.

