ಕಾಸರಗೋಡು: ಉಕ್ಕಿನಡ್ಕದಲ್ಲಿ ಕಾಸರಗೋಡು ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಶಿಲಾನ್ಯಾಸ ನಡೆಸಿ 13ವರ್ಷ ಸಂದರೂ ಸುಸಜ್ಜಿತ ಮೆಡಿಕಲ್ ಕಾಲೇಜ್ ಕಟ್ಟಡ ಕಾರ್ಯಗತವಾಗದ ಹಿನ್ನೆಲೆಯಲ್ಲಿ ಮೆಡಿಕಲ್ ಕಾಲೇಜ್ ಹೋರಾಟ ಸಮಿತಿ ವತಿಯಿಂದ ಕಾಸರಗೋಡು ಹೊಸ ಬಸ್ ನಿಲ್ದಾಣ ವಠಾರದಲ್ಲಿ ಆರಂಭಿಸಲಾದ ಅನಿರ್ಧಿಷ್ಟಾವಧಿ ಮುಷ್ಕರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಪ್ರಸಕ್ತ ಸಹಿ ಚಳವಳಿ ಹಾಗೂ ಆನ್ಲೈನ್ ಮುಷ್ಕರ ಆರಂಭಿಸಲಾಗಿದೆ.
ಮೆಡಿಕಲ್ ಕಾಲೇಜ್ ಹೋರಾಟ ಸಮಿತಿ ಸಂಚಾಲಕ, ಜಿ. ಪಂ. ಸದಸ್ಯ ಸೋಮಶೇಖರ್ ಜೆ. ಎಸ್. ಹಾಗೂ ಹೋರಾಟ ಸಮಿತಿ ಅಧ್ಯಕ್ಷ ಮಾಹಿನ್ ಕೇಳೋಟ್ ನೇತೃತ್ವದಲ್ಲಿ ಕಾಸರಗೋಡು ಹೊಸ ಬಸ್ ನಿಲ್ದಾಣ ವಠಾರದಲ್ಲಿ ಮುಷ್ಕರ ಆರಂಭಿಸಲಾಗಿತ್ತು. ಕಾಸರಗೋಡು ಶಾಸಕ ಎನ್. ಎ. ನೆಲ್ಲಿಕುನ್ನು ಉದ್ಘಾಟಿಸುವ ಮೂಲಕ ಹೋರಾಟಕ್ಕೆ ಚಾಲನೆ ನೀಡಿದ್ದರು. ಬಹಿರಂಗ ಮುಷ್ಕರ ಸ್ಥಗಿತಗೊಳಿಸಿ, ಬಸ್ ನಿಲ್ದಾಣ ವಠಾರದಲ್ಲಿ ಸಹಿ ಮುಷ್ಕರ ಆರಂಭಿಸುವುದರ ಜತೆಗೆ, ಸಾಮಾಜಿಕ ಜಾಲತಾಣದ ಮೂಲಕ ಹೋರಾಟ ಮುಂದುವರಿಸಲಾಗುವುದಾಗಿ ಮಾಹಿನ್ ಕೇಳೋಟ್ ತಿಳಿಸಿದ್ದಾರೆ.

