ಜೆರುಸಲೇಮ್: ಸಂಘರ್ಷದಿಂದ ಮಾನವೀಯತೆ ಯಾವತ್ತೂ ನಶಿಸಬಾರದು ಎಂದು ಇಸ್ರೇಲ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಜೊತೆಗೆ ಜೆರುಸಲೇಮ್ನಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಗಾಝಾದಲ್ಲಿನ ಪರಿಸ್ಥಿತಿಗೆ ಸಂಬಂಧಿಸಿದಂತೆ ಭಾರತದ ನಿಲುವಿನ ಬಗ್ಗೆ ಮಾತನಾಡಿದ ಮೋದಿ, ಗಾಝಾ ಶಾಂತಿ ಯೋಜನೆಯ ಮೂಲಕ ಶಾಂತಿಯ ಮಾರ್ಗವೊಂದನ್ನು ಸೃಷ್ಟಿಸಲಾಗಿದೆ ಹಾಗೂ ಈ ಪ್ರಯತ್ನಗಳಿಗೆ ಭಾರತ ಸಂಪೂರ್ಣ ಬೆಂಬಲ ನೀಡಿದೆ ಎಂದು ಹೇಳಿದರು.
''ಭಾರತದ ದೃಷ್ಟಿಕೋನ ಸ್ಪಷ್ಟವಾಗಿದೆ. ಒಂದು ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು. ಗಾಝಾ ಶಾಂತಿ ಯೋಜನೆಯು ಶಾಂತಿಯ ಮಾರ್ಗವೊಂದನ್ನು ತೆರೆದಿದೆ. ಇಂಥ ಪ್ರಯತ್ನಗಳಿಗೆ ಭಾರತ ಬೆಂಬಲ ನೀಡಿದೆ. ಭವಿಷ್ಯದಲ್ಲಿಯೂ ಭಾರತ ಈ ನಿಟ್ಟಿನಲ್ಲಿ ಸಹಕರಿಸಲಿದೆ ಹಾಗೂ ಎಲ್ಲಾ ದೇಶಗಳೊಂದಿಗೆ ಮಾತುಕತೆ ನಡೆಸಲಿದೆ'' ಎಂದು ಪ್ರಧಾನಿ ಮೋದಿ ಹೇಳಿದರು.
ಭಯೋತ್ಪಾದನೆಯ ವಿರುದ್ಧ ಭಾರತ ಮತ್ತು ಇಸ್ರೇಲ್ ಒಂದಾಗಿವೆ ಎಂದೂ ಅವರು ಹೇಳಿದರು. ''ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ ಎಂಬ ಸ್ಪಷ್ಟ ನಿಲುವನ್ನು ಭಾರತ ಮತ್ತು ಇಸ್ರೇಲ್ ಹೊಂದಿವೆ. ಭಯೋತ್ಪಾದನೆಯನ್ನು ಯಾವುದೇ ರೂಪದಲ್ಲಿ ಸ್ವೀಕರಿಸುವಂತಿಲ್ಲ. ನಾವು ಭಯೋತ್ಪಾದನೆ ಮತ್ತು ಅದರ ಬೆಂಬಲಿಗರ ವಿರುದ್ಧದ ಹೋರಾಟವನ್ನು ಮುಂದುವರಿಸುತ್ತೇವೆ'' ಎಂದು ಅವರು ನುಡಿದರು.
ಇದು ಪ್ರಧಾನಿಯಾಗಿ ಮೋದಿಯ ಎರಡನೇ ಇಸ್ರೇಲ್ ಪ್ರವಾಸವಾಗಿದೆ. ಅವರು 2017ರಲ್ಲಿ ಮೊದಲ ಬಾರಿಗೆ ಇಸ್ರೇಲ್ ಪ್ರವಾಸ ಕೈಗೊಂಡಿದ್ದರು. ಅದಕ್ಕೆ ಪ್ರತಿಯಾಗಿ ಮಾರನೇ ವರ್ಷ ಇಸ್ರೇಲ್ ಪ್ರಧಾನಿ ನೆತನ್ಯಾಹು ಭಾರತಕ್ಕೆ ಭೇಟಿ ನೀಡಿದ್ದರು.

