ಬೆಂಗಳೂರು: 'ಬೆಂಗಳೂರು-ಮಂಗಳೂರು ಮಧ್ಯೆ ವಂದೇ ಭಾರತ್ ರೈಲು ಸಂಚಾರ ಶೀಘ್ರ ಆರಂಭವಾಗಲಿದೆ. ಎರಡು ರೈಲುಗಳಿಗೆ ಅನುಮತಿ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಕಾರವಾರದವರೆಗೂ ವಿಸ್ತರಿಸಲಾಗುವುದು' ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಈ ಸಾಲಿನ ಬಜೆಟ್ನಲ್ಲಿ ಕರ್ನಾಟಕದ ರೈಲ್ವೆ ಯೋಜನೆಗಳಿಗೆ ₹7,748 ಕೋಟಿ ಸಿಗಲಿದೆ.
ಇದು ಹಿಂದಿನ ಯುಪಿಎ ಅವಧಿಯಲ್ಲಿ ನೀಡಿದ್ದ ಮೊತ್ತಕ್ಕಿಂತ 9 ಪಟ್ಟು ಹೆಚ್ಚು. ಯುಪಿಎ ಅವಧಿಯಲ್ಲಿ ಕರ್ನಾಟಕಕ್ಕೆ ವಾರ್ಷಿಕ ₹800 ಕೋಟಿ ಸಿಗುತ್ತಿತ್ತು ಎಂದು ಅವರು ವಿವರಿಸಿದರು.
ಬೆಂಗಳೂರಿನಿಂದ ಚೆನ್ನೈ ಹಾಗೂ ಹೈದರಾಬಾದ್ ನಗರಗಳಿಗೆ ಹೈಸ್ಪೀಡ್ ರೈಲು ಯೋಜನೆಗಳಿಗೆ ನೀಲನಕ್ಷೆ ಸಿದ್ಧಪಡಿಸಲಾಗುತ್ತಿದೆ. ಯೋಜನೆ ಅನುಷ್ಠಾನದ ನಂತರ ಬೆಂಗಳೂರಿನಿಂದ ಚೆನ್ನೈಗೆ 73 ನಿಮಿಷಗಳಲ್ಲಿ ತಲುಪಬಹುದು. ಯಶವಂತಪುರದಿಂದ ಕೋಲಾರಕ್ಕೆ ಮತ್ತೊಂದು ರೈಲು ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು.
ನಿರ್ಮಾಣ ಮತ್ತು ಮೂಲಸೌಕರ್ಯ ಉಪಕರಣಗಳ ಉತ್ಪಾದನೆಗೆ ಆದ್ಯತೆ ನೀಡಬೇಕಿದೆ. 200 ಪರಂಪರಾ ಕೈಗಾರಿಕಾ ಸಮೂಹಗಳ ಪುನರುತ್ಥಾನ ಕಾರ್ಯ ನಡೆಯಬೇಕಿದೆ. ವೆಚ್ಚದ ಮೇಲಿನ ನಿಯಂತ್ರಣ, ಸಮೂಹ ತ್ಯಾಜ್ಯ ಸಂಸ್ಕರಣಾ ಘಟಕಗಳನ್ನು ಹೊಂದುವುದು, ನೀರಿನ ಸೌಕರ್ಯ ವೃದ್ಧಿ, ಕಾರ್ಮಿಕರ ಸಮೂಹ ಗೃಹ ವ್ಯವಸ್ಥೆ, ಉತ್ತಮ ರಸ್ತೆ ವ್ಯವಸ್ಥೆಯನ್ನು ಪರಂಪರಾ ಕೈಗಾರಿಕಾ ಸಮೂಹಗಳಲ್ಲಿ ಅಳವಡಿಸಬೇಕಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದರಾದ ಪಿ.ಸಿ.ಮೋಹನ್, ಡಾ.ಸಿ.ಎನ್.ಮಂಜುನಾಥ್, ಮಾಜಿ ಸಂಸದ ಮುನಿಸ್ವಾಮಿ ಉಪಸ್ಥಿತರಿದ್ದರು.
ದೇಶದ ವಾಯುಯಾನ ಬಾಹ್ಯಾಕಾಶ ಯೋಜನೆಗಳಿಗೆ ಬೆಂಗಳೂರಿನ ಹಿಂದುಸ್ತಾನ್ ಏರೋನಾಟಿಕ್ಸ್ ಸಾಕಷ್ಟು ಉಪಕರಣಗಳನ್ನು ಪೂರೈಸುತ್ತಿದೆ. ಸೆಮಿ ಕಂಡಕ್ಟರ್ ವಲಯದಲ್ಲಿ ಬೆಂಗಳೂರು ಮತ್ತು ಮೈಸೂರು ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಅಶ್ವಿನಿ ವೈಷ್ಣವ್ ಮೆಚ್ಚುಗೆ ವ್ಯಕ್ತಪಡಿಸಿದರು. 2026-27ನೇ ಸಾಲಿನ ಬಜೆಟ್ ಮೂಲಕ 2047ರ ಭಾರತದ ಪರಿಕಲ್ಪನೆಗೆ ಪೂರಕವಾಗಿ ಯೋಜನೆಗಳ ನೀಲನಕ್ಷೆ ನೀಡಲಾಗಿದೆ. ಮೇಕ್ ಇನ್ ಇಂಡಿಯಾಗೆ ಮತ್ತಷ್ಟು ಬಲ ತುಂಬಲಾಗಿದೆ. ಸೆಮಿ ಕಂಡಕ್ಟರ್ ಬಯೋಫಾರ್ಮಾ ವಾಯುಯಾನ ಬಾಹ್ಯಾಕಾಶ ಹೈಟೆಕ್ ಟೂಲ್ ಉತ್ಪಾದನೆಗೆ ಒತ್ತು ನೀಡಲಾಗಿದೆ. ಎಐ ಕ್ರಾಂತಿಗೆ ಅನುಗುಣವಾಗಿ ಬಿ.ಟೆಕ್ ಎಂ.ಟೆಕ್ ಪಠ್ಯಕ್ರಮದಲ್ಲೂ ಬದಲಾವಣೆ ಆಗುತ್ತಿದೆ ಎಂದು ಹೇಳಿದರು. ಕರ್ನಾಟಕದ ಸಾಧನೆಗೆ ಮೆಚ್ಚುಗೆ - ಅಶ್ವಿನಿ ವೈಷ್ಣವ್, ಕೇಂದ್ರ ಸಚಿವ ಕೇಂದ್ರ ಬಜೆಟ್ನಲ್ಲಿ ರಾಜ್ಯಕ್ಕೆ ಸಿಕ್ಕಿರುವುದು ಚೊಂಬು ಎಂಬ ಸಿ.ಎಂ ಸಿದ್ದರಾಮಯ್ಯ ಹೇಳಿಕೆ ಸರಿಯಲ್ಲ. ಸಂಕುಚಿತ ದೃಷ್ಟಿಕೋನ ಹೊಂದಿರುವವರು ಮಾತ್ರ ಆ ರೀತಿ ವ್ಯಾಖ್ಯಾನಿಸಲು ಸಾಧ್ಯ.

