ನವದೆಹಲಿ: ಪಶ್ಚಿಮ ದೆಹಲಿಯ ಉತ್ತಮ್ ನಗರ ಪ್ರದೇಶದ ಮಟಿಯಾಲ ಕೊಳೆಗೇರಿ ಪ್ರದೇಶದಲ್ಲಿರುವ ಜುಗ್ಗಿ ಕ್ಲಸ್ಟರ್ ಮತ್ತು ತ್ಯಾಜ್ಯ ವಸ್ತುಗಳ ಗೋದಾಮುಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ದೆಹಲಿ ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.
'ಬೆಂಕಿಯಿಂದಾಗಿ ಕೊಳೆಗೇರಿಯ 300ರಿಂದ 400 ಮನೆಗಳು ಸುಟ್ಟು ಹೋಗಿವೆ.
ನಿರಂತರ ಕಾರ್ಯಾಚರಣೆ ಬಳಿಕ ಬೆಂಕಿ ಹತೋಟಿಗೆ ಬಂದಿದ್ದು, ಘಟನೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ' ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
'ಜುಗ್ಗಿ ಕ್ಲಸ್ಟರ್ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಬುಧವಾರ ರಾತ್ರಿ 11.54ಕ್ಕೆ ಕರೆ ಬಂದಿತ್ತು. ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ್ದೆವು. ಸುಮಾರು ನಾಲ್ಕು ಎಕರೆ ಪ್ರದೇಶದಲ್ಲಿರುವ ಕೊಳೆಗೇರಿಯ ಮನೆಗಳಿಗೆ ಬೆಂಕಿ ಹರಡಿತ್ತು. 23 ಅಗ್ನಿಶಾಮಕ ವಾಹನಗಳನ್ನು ಬೆಂಕಿ ನಂದಿಸಲು ನಿಯೋಜಿಸಲಾಗಿತ್ತು' ಎಂದು ಅವರು ಹೇಳಿದ್ದಾರೆ.
ನಿರಂತರ ಕಾರ್ಯಾಚರಣೆ ಬಳಿಕ ಬೆಳಿಗ್ಗೆ 3.45ಕ್ಕೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಯಾವುದೇ ಸ್ಫೋಟ ಸಂಭವಿಸದಂತೆ ತಡೆಯುವ ನಿಟ್ಟಿನಲ್ಲಿ ಕಾರ್ಯಾಚರಣೆ ಮುಂದುವರಿಸಲಾಗಿದೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದಿದ್ದಾರೆ.

