ಪ್ರಯಾಗ್ರಾಜ್: ಇಲ್ಲಿನ ಶೀತಲ ಶೇಖರಣ ಕಟ್ಟಡವು ಸೋಮವಾರ ಮಧ್ಯಾಹ್ನದ ವೇಳೆಗೆ ಕುಸಿದಿದ್ದರಿಂದ, ಅವಶೇಷಗಳಡಿಯಲ್ಲಿ ಸಿಲುಕಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ.
'ಘಟನೆಯಲ್ಲಿ 12 ಮಂದಿ ಕಾರ್ಮಿಕರು ಗಾಯಗೊಂಡಿದ್ದು, ಅವರನ್ನು ಎಸ್ಆರ್ಎನ್ ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಮನೀಶ್ ಕುಮಾರ್ ವರ್ಮಾ ತಿಳಿಸಿದ್ದಾರೆ.
'ದುರ್ಘಟನೆಯ ಮಾಹಿತಿ ತಿಳಿದ ತಕ್ಷಣ ಜಿಲ್ಲಾಡಳಿತ, ಪೊಲೀಸರು, ಎಸ್ಡಿಆರ್ಎಫ್ ಹಾಗೂ ಅಗ್ನಿಶಾಮಕ ಸಿಬ್ಬಂದಿಯು ರಕ್ಷಣಾ ಕಾರ್ಯದಲ್ಲಿ ಭಾಗಿಯಾಗಿ, ಸ್ಥಳದಲ್ಲಿ ಅವಶೇಷಗಳನ್ನು ತೆರವುಗೊಳಿಸಿದರು. ಜೆಸಿಬಿ ಯಂತ್ರದ ಮೂಲಕ ಮಣ್ಣು ತೆರವುಗೊಳಿಸಿ, ಸಿಲುಕಿದವರನ್ನು ಪಾರು ಮಾಡಲಾಯಿತು' ಎಂದು ಮಾಹಿತಿ ನೀಡಿದ್ದಾರೆ.
'ಫಾಫಾಮವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶೀತಲ ಕಟ್ಟಡವು ಏಕಾಏಕಿ ಕುಸಿದುಬಿತ್ತು. ಅಮೋನಿಯಾ ಗ್ಯಾಸ್ ಸೋರಿಕೆಯಾಗಿ ಸುತ್ತಲಿನ ಪರಿಸರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಗ್ಯಾಸ್ ಸೋರಿಕೆಯನ್ನು ತಡೆದಿದ್ದಾರೆ' ಎಂದು ಡಿಸಿಪಿ (ಗಂಗಾನಗರ) ಕುಲದೀಪ್ ಗನಾವತ್ ತಿಳಿಸಿದ್ದಾರೆ.

