ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾಗಿರುವ ಬಿಕ್ಕಟ್ಟಿನ ಪರಿಸ್ಥಿತಿ ಎದುರಿಸಲು ಹಾಗೂ ರಾಜ್ಯಗಳ ಸಿದ್ಧತಾ ಯೋಜನೆಗಳ ಕುರಿತು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಶುಕ್ರವಾರ ವರ್ಚುವಲ್ ಆಗಿ ಸಭೆ ನಡೆಸಿದರು.
ತಮಿಳುನಾಡು, ಕೇರಳ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಪುದುಚೇರಿಯಲ್ಲಿ ಚುನಾವಣೆ ಮಾದರಿ ಸಂಹಿತೆ ಜಾರಿಯಲ್ಲಿರುವ ಕಾರಣ ಆ ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸಿಲ್ಲ.
ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ಕುರಿತು ಈ ವಾರದ ಆರಂಭದಲ್ಲಿ ಸರ್ಕಾರವು ಸರ್ವಪಕ್ಷ ಸಭೆಯನ್ನು ಕರೆದಿತ್ತು. ಅಲ್ಲದೆ, ಪ್ರಧಾನಿ ಮೋದಿಯವರು ಸಂಸತ್ತಿನ ಉಭಯ ಸದನಗಳಲ್ಲಿ ಬಿಕ್ಕಟ್ಟಿನ ಕುರಿತು ಅಧಿಕೃತ ಹೇಳಿಕೆ ನೀಡಿದ್ದರು.
ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ ಫೆ.28 ರಂದು ಆರಂಭವಾದ ಈ ಸಂಘರ್ಷವು ಜಾಗತಿಕ ಇಂಧನ ಪೂರೈಕೆಯ ಮೇಲೆ ಪರಿಣಾಮ ಬೀರಿದೆ.
ಈ ಕುರಿತು ಗುರುವಾರ ಸ್ಪಷ್ಟನೆ ನೀಡಿರುವ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು, '74 ದಿನಗಳ ಅಗತ್ಯವನ್ನು ಪೂರೈಸುವಷ್ಟು ಕಚ್ಚಾ ತೈಲ ದಾಸ್ತಾನು ಮಾಡಿಕೊಳ್ಳುವ ಸಾಮರ್ಥ್ಯವು ದೇಶಕ್ಕೆ ಇದೆ. ಈಗಲೂ 60 ದಿನಗಳಿಗೆ ಆಗುವಷ್ಟು ಸಂಗ್ರಹ ಇದೆ. ಇದರಲ್ಲಿ ಕಚ್ಚಾ ತೈಲ, ಇಂಧನ ಸೇರಿವೆ' ಎಂದು ಹೇಳಿದೆ.

