'ಪಶ್ಚಿಮ ಏಷ್ಯಾ ಸಂಘರ್ಷವು ಜಾಗತಿಕ ಮಟ್ಟದಲ್ಲಿ ಭಾರಿ ಇಂಧನ ಬಿಕ್ಕಟ್ಟು ಸೃಷ್ಟಿಸಿದೆ. ಬಿಕ್ಕಟ್ಟಿನ ಲಾಭ ಪಡೆಯಲು ದುಷ್ಕರ್ಮಿಗಳು ಪ್ರಯತ್ನಿಸುತ್ತಿದ್ದಾರೆ. ಎಲ್ಪಿಜಿ ಸಿಲಿಂಡರ್ಗಳ ಅಕ್ರಮ ದಾಸ್ತಾನು ಆಗಬಾರದು. ಅವುಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಅವಕಾಶ ಸಿಗಬಾರದು.
ಆಯಾ ರಾಜ್ಯ ಸರ್ಕಾರಗಳು ಇದನ್ನು ಖಚಿತಪಡಿಸಿಕೊಳ್ಳಬೇಕು' ಎಂದು ಪ್ರಧಾನಿ ಸೂಚಿಸಿದ್ದಾರೆ.
'ಪಶ್ಚಿಮ ಏಷ್ಯಾ ಸಂಘರ್ಷದಿಂದ ದೇಶದಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ಎದುರಿಸಲು ಕೇಂದ್ರ ಸರ್ಕಾರ ಈಗಾಗಲೇ ಅಂತರ್ ಸಚಿವಾಲಯಗಳ ಸಮಿತಿಗಳನ್ನು ರಚಿಸಿದೆ. ಈ ಸಮಿತಿಗಳು ಆಮದು-ರಫ್ತು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿವೆ. ಹಣದುಬ್ಬರ ನಿಯಂತ್ರಿಸಲು, ಸುಸ್ಥಿರ ಆರ್ಥಿಕ ಬೆಳವಣಿಗೆ ದರ ಕಾಯ್ದುಕೊಳ್ಳಲು ಈ ಸಮಿತಿಗಳು ಕಾರ್ಯತಂತ್ರ ರೂಪಿಸಲಿವೆ' ಎಂದು ಪ್ರಧಾನಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
'ರೈತರಿಗೆ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಸಮಸ್ಯೆಯಾಗದಂತೆ ಎಚ್ಚರ ವಹಿಸಲಾಗಿದೆ. ಲಭ್ಯವಿರುವ ಎಲ್ಲ ಮೂಲಗಳಿಂದ ಕಚ್ಚಾತೈಲ ಮತ್ತು ಅನಿಲ ಸಂಗ್ರಹಕ್ಕೆ ಆದ್ಯತೆ ನೀಡಲಾಗಿದೆ. ಯುದ್ಧದ ಪರಿಣಾಮಗಳ ಬಗ್ಗೆ ಸರ್ಕಾರವು ಜಾಗರೂಕವಾಗಿದೆ ಮತ್ತು ಪೂರ್ವಭಾವಿ ಕ್ರಮಗಳನ್ನು ಕೈಗೊಂಡಿದೆ' ಎಂದು ರಾಜ್ಯಸಭೆಗೆ ತಿಳಿಸಿದ್ದಾರೆ.
ಕೊಲ್ಲಿ ದೇಶಗಳಲ್ಲಿ ಸುಮಾರು 1 ಕೋಟಿಯಷ್ಟು ಭಾರತೀಯರು ನೆಲೆಸಿದ್ದಾರೆ. ಇವರಲ್ಲಿ, ಪಶ್ಚಿಮ ಏಷ್ಯಾ ಸಂಘರ್ಷ ಆರಂಭಗೊಂಡ ನಂತರ ಸುಮಾರು 3.75 ಲಕ್ಷದಷ್ಟು ಜನರು ಭಾರತಕ್ಕೆ ಸುರಕ್ಷಿತವಾಗಿ ಮರಳಿದ್ದಾರೆ. 700 ವೈದ್ಯಕೀಯ ವಿದ್ಯಾರ್ಥಿಗಳು ಸೇರಿ ಇರಾನ್ನಿಂದ 1 ಸಾವಿರದಷ್ಟು ಭಾರತೀಯರು ವಾಪಸ್ ಬಂದಿದ್ದಾರೆ ಎಂದು ಪ್ರಧಾನಿ ಹೇಳಿದರು.

