ಕಾಸರಗೋಡು: ಕೇರಳದಲ್ಲಿ ರಾಷ್ಟ್ರೀಯ ಹೆದ್ದಾರಿ 66 ರ ಅಭಿವೃದ್ಧಿಯ ಸಂಪೂರ್ಣ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷ ಎಂ.ಎಲ್. ಅಶ್ವಿನಿ ಹೇಳಿದರು.
ಕೊಚ್ಚಿಯಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರೀಯ ಹೆದ್ದಾರಿಯ ಮೊದಲ ಹಂತದ ಉದ್ಘಾಟನೆಯನ್ನು ಆನ್ಲೈನ್ ಮೂಲಕ ಪ್ರಧಾನಿ ಉದ್ಘಾಟಿಸಿದ ಕಾರ್ಯಕ್ರಮಕ್ಕೆ ಪ್ರತಿಕ್ರಿಯಿಸುತ್ತಿದ್ದರು.
280 ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರವೇ ಕೇರಳ ಮತ್ತು ಈಶಾನ್ಯ ರಾಜ್ಯಗಳಲ್ಲಿ ಮೂಲಸೌಕರ್ಯ ಕ್ಷೇತ್ರದಲ್ಲಿ ಪ್ರಮುಖ ಅಭಿವೃದ್ಧಿ ಸಾಧ್ಯವಾಗಿದೆ. ಇಲ್ಲಿಯವರೆಗೆ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಯನ್ನು ಕೇರಳದ ಎಡ ಹಾಗೂ ಐಕ್ಯ ರಂಗಗಳು ದುರ್ಬಲಗೊಳಿಸುತ್ತಾ ಬಂದಿದ್ದು, ಕೇಂದ್ರ ಸರ್ಕಾರದ ದಿಟ್ಟ ನಡೆಯಿಂದ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಸಾಧ್ಯವಾಗಿದ್ದು, ಇಂದು ಪಿಣರಾಯಿವಿಜಯನ್ ನೇತೃತ್ವದ ಎಡರಂಗ ಸರ್ಕಾರ ಇದರ ಪ್ರಯೋಜನ ಪಡೆದುಕೊಳ್ಳಲು ಯತ್ನಿಸುತ್ತಿದೆ. ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಯನ್ನು ಎಡರಂಗವು ಜಾರಿಗೆ ತಂದಿದ್ದರೆ, ಇದುವಿ.ಎಸ್. ಅಚ್ಯುತಾನಂದನ್ ಮತ್ತು ಇ.ಕೆ. ನಾಯನಾರ್ ಸೇರಿದಂತೆ ಮುಖ್ಯಮಂತ್ರಿಗಳು ಈ ಹಿಂದೆ ಆಟಳಿತ ನಡೆಸಿದಾಗ ಇದು ಏಕೆ ಸಾಧ್ಯವಾಗಲಿಲ್ಲ ಎಂದು ಅಶ್ವಿನಿ ಪ್ರಶ್ನಿಸಿದರು. ಕೊಲ್ಲಂ ಮತ್ತು ಮಾಹೆ ಬೈಪಾಸ್ಗಳು 4 ದಶಕಗಳ ನಂತರ ಜಾರಿಗೊಂಡಿದೆ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯಲ್ಲಿ ದಶಕಗಳ ವಿಳಂಬದಿಂದಾಗಿ ಭೂಮಿಯ ಬೆಲೆ ಹಲವು ಪಟ್ಟು ಹೆಚ್ಚಾಗಿದೆ. ಇದೇ ಕಾರಣಕ್ಕೆ ಕೇರಳ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಭಾರೀ ಮೊತ್ತದ ಹಣ ಖರ್ಚು ಮಾಡಬೇಕಾಗಿ ಬಂದಿರುವುದಾಗಿ ತಿಳಿಸಿದ ಎಂ.ಎಲ್ ಅಶ್ವಿನಿ ಅವರು ರಾಷ್ಟ್ರೀಯ ಹೆದ್ದಾರಿಯ ತಲಪ್ಪಾಡಿ-ಚೆಂಗಳ ರೀಚನ್ನು ಉದುಮ ಶಾಸಕ ಸಿ.ಎಚ್. ಕುಂಞಂಬು ನೇತೃತ್ವದಲ್ಲಿ ನಡೆದ ಸಮಾನಾಂತರ ಉದ್ಘಾಟನಾ ಕಾರ್ಯಕ್ರಮವನ್ನು ಲೇವಡಿ ಮಾಡಿದರು.



