ನವದೆಹಲಿ: ಮಹಿಳಾ ಮೀಸಲಾತಿ ಕಾಯ್ದೆಯ ಅನುಷ್ಠಾನಕ್ಕೆ ವಿಧಾನಗಳು ಮತ್ತು ಮಾರ್ಗಸೂಚಿ ಚರ್ಚೆಗೆ ಪ್ರಧಾನಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯಬೇಕು ಎಂದು ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರಿಗೆ ತಿಳಿಸಿದ್ದಾರೆ.
ಈ ಬಗ್ಗೆ ರಿಜಿಜು ಅವರ ಪತ್ರಕ್ಕೆ ಖರ್ಗೆ ಈ ರೀತಿ ಪ್ರತಿಕ್ರಿಯಿಸಿದ್ದಾರೆ.
'ಕೆಲವು ದಿನಗಳ ಹಿಂದೆ ನೀವು ಈ ವಿಷಯದ ಬಗ್ಗೆ ನನ್ನೊಂದಿಗೆ ಮಾತನಾಡಿದ್ದೀರಿ. ರಾಜ್ಯಸಭೆಯ ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯ ಸಚೇತಕ ಜೈರಾಮ್ ರಮೇಶ್ ಅವರು ಹೇಳಿರುವಂತೆ, ಇದನ್ನು ಎಲ್ಲಾ ವಿರೋಧ ಪಕ್ಷಗಳೊಂದಿಗೆ ಒಟ್ಟಾಗಿ ಚರ್ಚಿಸಲು ಸರ್ವಪಕ್ಷ ಸಭೆಯನ್ನು ಸರ್ಕಾರ ಕರೆಯಬೇಕು ಎಂಬುದು ಕಾಂಗ್ರೆಸ್ ನಿಲುವಾಗಿದೆ ಎಂದು ನಾನು ಈಗಾಗಲೇ ನಿಮಗೆ ತಿಳಿಸಿದ್ದೇನೆ' ಎಂದು ಖರ್ಗೆ ಹೇಳಿದ್ದಾರೆ.
'ಪ್ರಧಾನ ಮಂತ್ರಿಯವರ ಅಧ್ಯಕ್ಷತೆಯಲ್ಲಿ ಇಂತಹ ಸರ್ವಪಕ್ಷ ಸಭೆಯನ್ನು ಆದಷ್ಟು ಬೇಗ ಕರೆಯಲಾಗುವುದು ಎಂದು ನಾನು ಭಾವಿಸುವೆ' ಎಂದಿದ್ದಾರೆ.
ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲೇ ಮಹಿಳಾ ಮೀಸಲಾತಿ ಕಾಯ್ದೆಯನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದ್ದು, ಈಗ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲೇ ಕಾನೂನಿಗೆ ತಿದ್ದುಪಡಿ ತರಲು ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಸಂಸತ್ತಿನಲ್ಲಿ ಸಂವಿಧಾನ ತಿದ್ದುಪಡಿ ಮಸೂದೆಯ ಸುಗಮ ಅಂಗೀಕಾರವನ್ನು ಖಚಿತಪಡಿಸಿಕೊಳ್ಳಲು ವಿರೋಧ ಪಕ್ಷಗಳ ಬೆಂಬಲ ಪಡೆಯುವ ನಿಟ್ಟಿನಲ್ಲಿ ಈ ಪತ್ರ ಬರೆಯಲಾಗಿದೆ. ಆದರೆ ಕೇಂದ್ರ ಸಚಿವ ಸಂಪುಟವು ಇದಕ್ಕೆ ಇನ್ನೂ ಅನುಮೋದನೆ ನೀಡಿಲ್ಲ.
ಸಂಪುಟದ ಅನುಮೋದನೆ ದೊರೆತ ನಂತರ, ಮೊದಲು ರಾಜ್ಯಸಭೆಯಲ್ಲಿ ಈ ತಿದ್ದುಪಡಿಯನ್ನು ಮಂಡಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಮಹಿಳಾ ಮೀಸಲಾತಿ ಕಾಯ್ದೆಯನ್ನು 2023ರಲ್ಲಿ ಸಂಸತ್ತು ಅಂಗೀಕರಿಸಿತ್ತು. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಕಾಯ್ದೆಯನ್ನು ಸಂವಿಧಾನ ತಿದ್ದುಪಡಿ ತರುವ ಮೂಲಕ ತರಲಾಗಿತ್ತು, ಆದರೆ ಇದು ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆ ಪೂರ್ಣಗೊಂಡ ನಂತರವಷ್ಟೇ ಜಾರಿಗೆ ಬರಬೇಕಿತ್ತು.

