ತಿರುವನಂತಪುರಂ: ಕೇರಳದಲ್ಲಿ ಬಿಜೆಪಿಯ ಅಸ್ತಿತ್ವ ಬೆಳೆಯುತ್ತಿದೆ ಎಂಬ ವಾದಗಳನ್ನು ಅಲ್ಲಗಳೆದಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಯಾವುದೇ ಸ್ಥಾನದಲ್ಲೂ ಗೆಲುವು ಸಾಧಿಸುವ ಸಾಧ್ಯತೆ ಇಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ANI ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ, ಕೇರಳದಲ್ಲಿ ಬಿಜೆಪಿಯ ಪ್ರಭಾವವನ್ನು ವಿಸ್ತರಿಸಲು ಕೆಲವು ಗುಂಪುಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂಬುದನ್ನು ಪಿಣರಾಯಿ ವಿಜಯನ್ ಒಪ್ಪಿಕೊಂಡಿದ್ದಾರೆ. ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಿರುವನಂತಪುರಂ ನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿರುವುದನ್ನೂ ಅವರು ಉಲ್ಲೇಖಿಸಿದ್ದಾರೆ. ಆದರೆ, ಈ ವಿಜಯವು ಬಿಜೆಪಿಗೆ ಕೇರಳದ ಜನತೆ ವ್ಯಾಪಕ ಬೆಂಬಲಿಸಿದ್ದಾರೆ ಎಂದು ವ್ಯಾಖ್ಯಾನಿಸಕೂಡದು ಎಂದು ಅವರು ಎಚ್ಚರಿಸಿದ್ದಾರೆ.
"ತಿರುವನಂತಪುರಂ ನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದನ್ನು ಇಡೀ ಕೇರಳದ ಜನತೆ ಬಿಜೆಪಿಯನ್ನು ಒಪ್ಪಿಕೊಂಡಿದ್ದಾರೆ ಎಂದು ತಪ್ಪಾಗಿ ಅರ್ಥ ಮಾಡಿಕೊಳ್ಳಕೂಡದು" ಎಂದು ಅವರು ಹೇಳಿದ್ದಾರೆ.
ಇದೇ ವೇಳೆ ಕೇರಳದಲ್ಲಿ ಕಾಂಗ್ರೆಸ್ ಪಕ್ಷದ ಬೆಳವಣಿಗೆಯಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರ ಪಾತ್ರವಿದೆ ಎಂಬ ಮಾತುಗಳನ್ನೂ ಅವರು ತಳ್ಳಿ ಹಾಕಿದ್ದಾರೆ.
ರಾಹುಲ್ ಗಾಂಧಿ ಹಾಗೂ ಇನ್ನಿತರ ರಾಷ್ಟ್ರೀಯ ನಾಯಕರ ಉಪಸ್ಥಿತಿಯಿಂದ ಕೇರಳದಲ್ಲಿ ಕಾಂಗ್ರೆಸ್ ವಿಸ್ತರಣೆಗೆ ನೆರವಾಗಿದೆಯೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಪಿಣರಾಯಿ ವಿಜಯನ್, "ರಾಹುಲ್ ಗಾಂಧಿ ಹಾಗೂ ಇನ್ನಿತರ ರಾಷ್ಟ್ರೀಯ ನಾಯಕರು ಕೆಲಸ ಮಾಡುತ್ತಿರುವ ಸ್ಥಳಗಳಲ್ಲಿ ಕಾಂಗ್ರೆಸ್ ಯಾವ ಬೆಳವಣಿಗೆ ಸಾಧಿಸಿದೆ? ಈ ಸ್ಥಳಗಳಲ್ಲಿ ಯಾವುದೇ ಮಹತ್ತರ ಬೆಳವಣಿಗೆ ಕಂಡು ಬಂದಿಲ್ಲ. ಅವರ ಆಗಮನದಿಂದ ಕೇರಳದಲ್ಲಿ ಯಾವುದೇ ನಿರ್ದಿಷ್ಟ ಬದಲಾವಣೆಯಾಗಲಿದೆ ಎಂದು ನನಗನ್ನಿಸುತ್ತಿಲ್ಲ" ಎಂದು ಹೇಳಿದ್ದಾರೆ.

