ಕೋಲ್ಕತ್ತ: ಬಿಜೆಪಿ ಹಿರಿಯ ನಾಯಕ ಸುವೇಂಧು ಅಧಿಕಾರಿ ಅವರ ಆಪ್ತ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿದ್ದ ಮಾಜಿ ಪಂಚಾಯತ್ ಮುಖ್ಯಸ್ಥ ಪವಿತ್ರಾ ಕರ್ ಅವರು ಮಂಗಳವಾರ ಮತ್ತೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ನಂದಿಗ್ರಾಮದಲ್ಲಿ ಸುವೇಂಧು ಅವರ ಪ್ರತಿಸ್ಪರ್ಧಿಯಾಗಿ ಪವಿತ್ರಾ ಅವರೇ ಕಣಕ್ಕಿಳಿಯಬಹುದು ಎಂಬ ಊಹಾಪೋಹಗಳ ನಡುವೆಯೇ ಈ ಬೆಳವಣಿಗೆ ನಡೆದಿರುವುದು ಮಹತ್ವ ಪಡೆದಿದೆ.
ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಸಮ್ಮುಖದಲ್ಲಿ ಪವಿತ್ರಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಟಿಎಂಸಿ ಪೋಸ್ಟ್ ಮಾಡಿದ್ದು, 'ಬಿಜೆಪಿಯ ಜನವಿರೋಧಿ ನೀತಿಗಳಿಂದ ಪವಿತ್ರಾ ಬೇಸತ್ತಿದ್ದಾರೆ' ಎಂದಿದೆ.
ಪಬಿತ್ರಾ ಅವರು 2020ರಲ್ಲಿ ಬಿಜೆಪಿ ಸೇರ್ಪಡೆಗೊಳ್ಳಲು ಟಿಎಂಸಿ ತೊರೆದಿದ್ದರು.
2021ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಕ್ಷೇತ್ರದಲ್ಲಿ ಬೋಯಲ್-1 ಗ್ರಾಮ ಪಂಚಾಯಿತಿ ಕ್ಷೇತ್ರದ ವ್ಯಾಪ್ತಿಯಲ್ಲಿ ಬಿಜೆಪಿಗೆ ಹೆಚ್ಚು ಮತಗಳು ದೊರಕುವಂತೆ ಮಾಡುವಲ್ಲಿಯೂ ಅವರು ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ.
ನಂದಿಗ್ರಾಮ ಕ್ಷೇತ್ರದಲ್ಲಿ ಬಿಜೆಪಿ ನಾಯಕ ಸುವೇಂಧು ಅಧಿಕಾರಿ ಅವರು 2021ರಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು 1,900 ಮತಗಳ ಅಂತರದಲ್ಲಿ ಸೋಲಿಸಿದ್ದರು ಎಂಬುದು ಗಮನಾರ್ಹ.

