ಲಖನೌ: ಶೈತ್ಯಾಗಾರದ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಕನಿಷ್ಠ ನಾಲ್ವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಸೋಮವಾರ ಉತ್ತರ ಪ್ರದೇಶದ ಪ್ರಯಾಗರಾಜ ಜಿಲ್ಲೆಯ ಚಂದಾಪುರ ಗ್ರಾಮದಲ್ಲಿ ನಡೆದಿದೆ.
ಅಮೋನಿಯಾ ಅನಿಲ ಟ್ಯಾಂಕ್ ಸ್ಫೋಟಗೊಂಡು ಶೈತ್ಯಾಗಾರಕ್ಕೆ ಹಾನಿಯಾಗಿದೆ ಎಂದು ವರದಿಯಾಗಿದೆ.
ಅವಶೇಷಗಳಡಿ ಇನ್ನೂ ಹತ್ತಾರು ಕಾರ್ಮಿಕರು ಸಿಲುಕಿರುವ ಸಾಧ್ಯತೆಯಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಮೃತಪಟ್ಟವರನ್ನು ಬಿಹಾರ ಮೂಲದವರು ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಆರು ಮಂದಿ ಸೇರಿ ಗಾಯಗೊಂಡ ಎಲ್ಲಾ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯಾಹ್ನ ಸುಮಾರು 1 ಗಂಟೆಯ ಸುಮಾರಿಗೆ ಕಾರ್ಮಿಕರು ಊಟ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ. ಅಮೋನಿಯಾ ಅನಿಲ ಸೋರಿಕೆಯಾದ ಕಾರಣ ಸ್ಥಳಕ್ಕೆ ತೆರಳಲಾಗದೆ ರಕ್ಷಣಾ ಕಾರ್ಯಾಚರಣೆ ವಿಳಂಬವಾಯಿತು ಎಂದು ಅವರು ತಿಳಿಸಿದ್ದಾರೆ.
ಘಟನೆ ನಡೆದ ಸಂದರ್ಭದಲ್ಲಿ ಕಟ್ಟಡದ ಒಳಗೆ 25ಕ್ಕಿಂತಲೂ ಹೆಚ್ಚು ಕಾರ್ಮಿಕರಿದ್ದರು. ಅವಶೇಷಗಳಡಿ ಸಿಲುಕಿದ್ದ ಕೆಲ ಕಾರ್ಮಿಕರನ್ನು ಹೊರತೆಗೆಯುವಲ್ಲಿ ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ಯಶಸ್ವಿಯಾಗಿದೆ.

