ರಾಷ್ಟ್ರಪತಿ ಭವನದಿಂದ ಗುರುವಾರ ಹೊರಡಿಸಿದ ಆದೇಶದ ಪ್ರಕಾರ, ಕೆಲವು ರಾಜ್ಯಪಾಲರನ್ನು ವರ್ಗಾವಣೆ ಮಾಡಲಾಗಿದ್ದು, ಕೆಲವರನ್ನು ಹೊಸದಾಗಿ ನೇಮಿಸಲಾಗಿದೆ.
ತೆಲಂಗಾಣದ ರಾಜ್ಯಪಾಲರಾಗಿದ್ದ ಜಿಷ್ಣು ದೇವ್ ವರ್ಮಾ ಅವರನ್ನು ಮಹಾರಾಷ್ಟ್ರದ ರಾಜ್ಯಪಾಲರಾಗಿ ವರ್ಗಾಯಿಸಲಾಗಿದೆ. ಹಿಮಾಚಲ ಪ್ರದೇಶದ ರಾಜ್ಯಪಾಲ ಶಿವ ಪ್ರತಾಪ್ ಶುಕ್ಲಾ ಅವರನ್ನು ತೆಲಂಗಾಣದ ರಾಜ್ಯಪಾಲರಾಗಿ ನೇಮಿಸಲಾಗಿದೆ.
ಬಿಹಾರದ ಮಾಜಿ ಸಚಿವ ನಂದ ಕಿಶೋರ್ ಯಾದವ್ ಅವರನ್ನು ನಾಗಾಲ್ಯಾಂಡ್ ರಾಜ್ಯಪಾಲರಾಗಿ ನೇಮಿಸಲಾಗಿದ್ದು, ನಿವೃತ್ತ ಲೆಫ್ಟಿನೆಂಟ್ ಜನರಲ್ ಸೈಯದ್ ಅತಾ ಹುಸ್ನೈನ್ ಅವರನ್ನು ಬಿಹಾರದ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ.
ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿದ್ದ ಆನಂದ್ ಬೋಸ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತಮಿಳುನಾಡಿನ ರಾಜ್ಯಪಾಲ ಆರ್.ಎನ್. ರವಿ ಅವರನ್ನು ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ನೇಮಿಸಲಾಗಿದೆ. ಈ ಮಧ್ಯೆ ಕೇರಳದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ತಮಿಳುನಾಡಿನ ರಾಜ್ಯಪಾಲರ ಕಾರ್ಯಭಾರವನ್ನು ತಾತ್ಕಾಲಿಕವಾಗಿ ನಿರ್ವಹಿಸಲಿದ್ದಾರೆ.
ಕೇಂದ್ರಾಡಳಿತ ಪ್ರದೇಶಗಳಲ್ಲಿಯೂ ಬದಲಾವಣೆ ಮಾಡಲಾಗಿದೆ. ಲಡಾಖ್ನ ಲೆಫ್ಟಿನೆಂಟ್ ಗವರ್ನರ್ ಕವಿಂದರ್ ಗುಪ್ತಾ ಅವರನ್ನು ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ನೇಮಿಸಲಾಗಿದೆ. ದಿಲ್ಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರನ್ನು ಲಡಾಖ್ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಲಾಗಿದೆ.
ಅಮೆರಿಕಕ್ಕೆ ಭಾರತದ ಮಾಜಿ ರಾಯಭಾರಿ ತರಂಜಿತ್ ಸಿಂಗ್ ಸಂಧು ಅವರನ್ನು ದಿಲ್ಲಿಯ ಹೊಸ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಲಾಗಿದೆ.

