ನವದೆಹಲಿ: ಉನ್ನಾವೊ ಅತ್ಯಾಚಾರ ಪ್ರಕರಣದಲ್ಲಿ, ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿರುವುದನ್ನು ಪ್ರಶ್ನಿಸಿ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿರುವ ಅರ್ಜಿಯಲ್ಲಿ ಸಂತ್ರಸ್ತೆಯೂ ಕಕ್ಷಿದಾರಳಾಗಲು ಸುಪ್ರೀಂ ಕೋರ್ಟ್ ಸೋಮವಾರ ಅನುಮತಿ ನೀಡಿದೆ.
ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರಿದ್ದ ಪೀಠವು, 'ವಿಚಾರಣೆಯಲ್ಲಿ ತನ್ನ ಹೇಳಿಕೆ ನೀಡುವ ಹಕ್ಕು ಸಂತ್ರಸ್ತೆಗಿದೆ' ಎಂದು ಹೇಳಿತು. ಅಪರಾಧಿಯ ಜೀವಾವಧಿ ಶಿಕ್ಷೆಯನ್ನು ರದ್ದುಗೊಳಿಸುವುದರ ವಿರುದ್ಧ ಪ್ರಮಾಣಪತ್ರ ಸಲ್ಲಿಸಲು ಸಂತ್ರಸ್ತೆಗೆ ಎರಡು ವಾರ ಕಾಲಾವಕಾಶ ನೀಡಿತು.
ಸಿಬಿಐ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಗೈರಾಗಿದ್ದ ಕಾರಣ ಪೀಠವು ಪ್ರಕರಣವನ್ನು ಕೈಗೆತ್ತಿಕೊಳ್ಳಲಿಲ್ಲ.
ಸೆಂಗರ್ ಪರ ವಕೀಲರಾದ ಎನ್. ಹರಿಹರನ್ ಅವರು 'ದೆಹಲಿ ಹೈಕೋರ್ಟ್ ನನ್ನ ಕಕ್ಷಿದಾರರಿಗೆ ನೀಡಿರುವ ಸ್ವಾತಂತ್ರ್ಯವನ್ನು ಮೊಟಕುಗೊಳಿಸಲಾಗುತ್ತಿದೆ. ಪ್ರಕರಣವನ್ನು ಶೀಘ್ರವೇ ವಿಚಾರಣೆಗೆ ಪಟ್ಟಿ ಮಾಡಬೇಕು' ಎಂದು ಪೀಠವನ್ನು ಕೇಳಿಕೊಂಡರು.
ಪ್ರಕರಣದ ಮುಂದಿನ ವಿಚಾರಣೆಯ ದಿನಾಂಕವನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ಸಿಜೆಐ ಹೇಳಿದರು.
ತಮ್ಮ ಜೀವಕ್ಕೆ ಬೆದರಿಕೆ ಇದೆ ಎಂದು ಆರೋಪಿಸಿ ಸಂತ್ರಸ್ತೆಯ ಸಂಬಂಧಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಪೀಠವು ತಿರಸ್ಕರಿಸಿತು.
2017ರಲ್ಲಿ ನಡೆದ ಅತ್ಯಾಚಾರ ಪ್ರಕರಣದಲ್ಲಿ, ಸೆಂಗರ್ಗೆ ಜೀವಾವಧಿ ಶಿಕ್ಷೆ ವಿಧಿಸಿ ವಿಚಾರಣಾ ನ್ಯಾಯಾಲಯವು 2019ರಲ್ಲಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಸೆಂಗರ್ ಹೈಕೋರ್ಟ್ ಮೊರೆಹೋಗಿದ್ದರು. ಶಿಕ್ಷೆಯನ್ನು ಹೈಕೋರ್ಟ್ ಅಮಾನತು ಮಾಡಿತ್ತು. ಈ ಆದೇಶಕ್ಕೆ 2025ರ ಡಿಸೆಂಬರ್ 29ರಂದು ಸುಪ್ರೀಂ ಕೋರ್ಟ್ ತಡೆ ನೀಡಿತ್ತು.

