ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಸಂಘರ್ಷದ ಹಿನ್ನೆಲೆಯಲ್ಲಿ ದೇಶದಲ್ಲಿ ಲಾಕ್ಡೌನ್ ಹೇರುವ ಯಾವುದೇ ಪ್ರಸ್ತಾಪ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ.
ದೇಶದಲ್ಲಿ ಲಾಕ್ಡೌನ್ ಹೇರಿಕೆಯಾಗಲಿದೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದವು.
ಈ ಕುರಿತು ನಿರ್ಮಲಾ ಪ್ರತಿಕ್ರಿಯಿಸಿದ್ದಾರೆ.
ರಾಜಕಾರಣಿಗಳು ಜನರಲ್ಲಿ ವದಂತಿಗಳನ್ನು ಹರಡಿ ಭೀತಿಯ ವಾತಾವರಣ ಸೃಷ್ಟಿಸಬಾರದು ಎಂದು ವಿನಂತಿಸಿದ್ದಾರೆ.
'ಜಾಗತಿಕ ಕಚ್ಚಾ ತೈಲೆ ಬೆಲೆ ಏರಿಕೆಯ ಹೊರೆ ಜನಸಾಮಾನ್ಯರ ಮೇಲೆ ಬೀಳದಂತೆ ನೋಡಿಕೊಳ್ಳುವುದರ ಜೊತೆಗೆ ವಿತ್ತೀಯ ಕೊರತೆಯನ್ನು ನೀಗಿಸಲು ಬೇಕಾದ ಕ್ರಮಗಳನ್ನು ಸರ್ಕಾರವು ಕೈಗೊಳ್ಳುತ್ತದೆ' ಎಂದು ಅವರು ಹೇಳಿದ್ದಾರೆ.
ರಾಜ್ಯಸಭೆಯಲ್ಲಿ 2026ರ ಹಣಕಾಸು ಮಸೂದೆ ಮೇಲಿನ ಚರ್ಚೆಗೆ ಉತ್ತರಿಸಿದ ನಿರ್ಮಲಾ, 'ಬೇರೆ ಹಲವು ದೇಶಗಳಲ್ಲಿ ಇಂಧನ ಬೆಲೆಗಳಲ್ಲಿ ಶೇ 20ರಿಂದ 50ರಷ್ಟು ಏರಿಕೆ ಕಂಡಿದ್ದರೂ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ' ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕದಲ್ಲಿ ಶುಕ್ರವಾರ ₹10ರಷ್ಟು ಕಡಿತ ಮಾಡಿದೆ.

