ನವದೆಹಲಿ: ದೆಹಲಿಯ ಉತ್ತಮ್ ನಗರದ ಘಟನೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ನೀಡಿದ ಹೇಳಿಕೆಗಳಿಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷ (ಬಿಜೆಪಿ) ತೀವ್ರ ವಾಗ್ದಾಳಿ ನಡೆಸಿದ್ದು, ರಾಹುಲ್ ಗಾಂಧಿ ಅವರು ಸೂಕ್ಷ್ಮ ವಿಚಾರಗಳನ್ನು ರಾಜಕೀಯಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದೆ.
ಉತ್ತಮ್ ನಗರದ ನಿವಾಸಿಗಳನ್ನು ಉದ್ದೇಶಿಸಿ ಮಾತನಾಡಿದ್ದ ರಾಹುಲ್, ಜನರು ಯಾವುದೇ ಪ್ರಚೋದನೆಗೆ ಒಳಗಾಗಬಾರದು ಎಂದು ಮನವಿ ಮಾಡಿದ್ದರು. ಅಲ್ಲದೆ, ಸಮಾಜದಲ್ಲಿ ಸೃಷ್ಟಿಯಾಗುತ್ತಿರುವ ದಾರಿತಪ್ಪಿಸುವ ಹೇಳಿಕೆಗಳ ಕುರಿತು ಎಚ್ಚರಿಕೆಯಿಂದ ಇರಬೇಕು. ಸಮಾಜದಲ್ಲಿ ಏಕತೆ ಮತ್ತು ಶಾಂತಿಯನ್ನು ಕಾಪಾಡಿಕೊಳ್ಳುವಂತೆ ಒತ್ತಿ ಹೇಳಿದ್ದಾರೆ.
ರಾಹುಲ್ ಗಾಂಧಿ ಅವರ ಹೇಳಿಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ವಕ್ತಾರ ಗುರು ಪ್ರಕಾಶ್, ರಾಹುಲ್ ಗಾಂಧಿ ಅವರು ಸಂವೇದನಾಶೀಲವಾಗಿರುವಂತೆ ನಟಿಸುತ್ತಾರೆ. ರಾಜಕೀಯ ಲಾಭಕ್ಕಾಗಿ ಈ ರೀತಿ ಮಾಡುತ್ತಾರೆ. ರಾಹುಲ್ ಗಾಂಧಿ ಅವರು ಜನರಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ದೂರಿದ್ದಾರೆ.
ದೆಹಲಿ ಬಿಜೆಪಿ ಅಧ್ಯಕ್ಷ ವಿರೇಂದ್ರ ಸಚ್ದೇವ ಮಾತನಾಡಿ, ರಾಹುಲ್ ಗಾಂಧಿ ಅವರ ಹೇಳಿಕೆಗಳು ಅಸಂಬದ್ಧವಾಗಿದ್ದು, ಬಹಳ ತಡವಾಗಿ ಪ್ರತಿಕ್ರಿಯಿಸಿದ್ದಾರೆ. ರಾಹುಲ್ ಗಾಂಧಿ ಅವರು ಅಪ್ರಸ್ತುತ ಮನವಿ ಮಾಡುವ ಬದಲು, ಮೊದಲು ಈ ಕೃತ್ಯ ಎಸಗಿದ ಕೊಲೆಗಡುಕರನ್ನು ಖಂಡಿಸಬೇಕಿತ್ತು. ಕಳೆದ ಎರಡು ವಾರಗಳಿಂದ ಮೌನವಾಗಿದ್ದ ರಾಹುಲ್, ಈಗ ಏಕಾಏಕಿ ಬಿಜೆಪಿ ಮೇಲೆ ಗೂಬೆ ಕೂರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ
ಉತ್ತಮ್ ನಗರ ಘಟನೆಯಿಂದ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮಾತಿನ ಚಕಮಕಿ ತಾರಕಕ್ಕೇರಿದೆ. ದೆಹಲಿಯ ಉತ್ತಮ್ ನಗರದಲ್ಲಿ ಮಾರ್ಚ್ 4ರಂದು ಹೋಳಿ ಹಬ್ಬದ ದಿನದಂದು ನೀರಿನ ಬಲೂನ್ ಎಸೆದ ವಿಚಾರಕ್ಕೆ ಸಂಬಂಧಿಸಿದಂತೆ ನೆರೆಹೊರೆಯವರ ನಡುವೆ ನಡೆದ ಜಗಳವು ತೀವ್ರ ಸ್ವರೂಪ ಪಡೆದು, 26 ವರ್ಷದ ತರುಣ್ ಕುಮಾರ್ ಎಂಬ ಯುವಕನ ಹತ್ಯೆಗೆ ಕಾರಣವಾಗಿತ್ತು.

