ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಯುದ್ಧ ಹಾಗೂ ಅದರಿಂದ ದೇಶದಲ್ಲಿ ಉಂಟಾಗಿರುವ ಇಂಧನ ಪರಿಸ್ಥಿತಿಯ ಕುರಿತು ಚರ್ಚಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಬುಧವಾರ(ಮಾ.25) ಸಂಜೆ 5 ಗಂಟೆಗೆ ಸರ್ವಪಕ್ಷ ಸಭೆ ಕರೆದಿದೆ.
ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ.
ವಿದೇಶಾಂಗ ಸಚಿವ ಎಸ್. ಜೈಶಂಕರ್, ಪೆಟ್ರೋಲಿಯಂ ಸಚಿವ ಹರದೀಪ್ ಸಿಂಗ್ ಪುರಿ ಸೇರಿದಂತೆ ಕೇಂದ್ರ ಸರ್ಕಾರದ ಪ್ರಮುಖ ಸಚಿವರು ಭಾಗವಹಿಸಲಿದ್ದಾರೆ.
ಈ ಸಭೆಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಗೈರು ಹಾಜರಾಗಲಿದ್ದಾರೆ. ಆದರೆ, ರಾಜ್ಯಸಭೆಯಲ್ಲಿನ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿ ವಿಪಕ್ಷದ ಇತರೆ ಪ್ರಮುಖ ನಾಯಕರು ಭಾಗವಹಿಸುವ ನಿರೀಕ್ಷೆ ಇದೆ.
ಈ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ. 'ನಾಳೆ(ಮಾ.25) ಕೇರಳದಲ್ಲಿ ಕಾರ್ಯಕ್ರಮವು ನಿಗದಿಯಾಗಿರುವುದರಿಂದ, ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ' ಎಂದು ಹೇಳಿದ್ದಾರೆ.
'ಸರ್ವಪಕ್ಷ ಸಭೆಯಲ್ಲಿ ನಾನು ಭಾಗವಹಿಸುವುದಿಲ್ಲ. ಈ ಪರಿಸ್ಥಿತಿಯ ಕುರಿತು ಮುಕ್ತ ಚರ್ಚೆಯಾಗಬೇಕಿತ್ತು, ಆದರೆ ಸರ್ಕಾರವು ತಪ್ಪು ಮಾಡಿದೆ. ಪ್ರಧಾನಿ ಮೋದಿ ಅವರು ಭಾರತ ಮತ್ತು ರೈತರ ಹಿತಾಸಕ್ತಿಗಾಗಿ ಕೆಲಸ ಮಾಡುವುದಿಲ್ಲ. ಅವರು ಅಮೆರಿಕ ಮತ್ತು ಇಸ್ರೇಲ್ ಹೇಳಿದಂತೆ ಮಾತ್ರ ನಡೆದುಕೊಳ್ಳುತ್ತಾರೆ. ಈ ಕುರಿತು ಬೇಕಾದರೆ ಲಿಖಿತ ಹೇಳಿಕೆ ನೀಡುತ್ತೇನೆ' ಎಂದು ಹೇಳಿದ್ದಾರೆ.
ಯುದ್ಧದ ಕುರಿತು ಸಂಸತ್ ಅಧಿವೇಶನದಲ್ಲಿ ಚರ್ಚೆ ನಡೆಸಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸಿದ್ದವು.
ಪಶ್ಚಿಮ ಏಷ್ಯಾ ಯುದ್ಧದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಮಾತನಾಡಿದ ಬಳಿಕ ಸರ್ವಪಕ್ಷ ಸಭೆಯನ್ನು ಕರೆಯಲಾಗಿದೆ.
'ಚರ್ಚೆ ನಡೆಯದಂತೆ ತಡೆಯುವ ಯತ್ನ'
ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯ ಕುರಿತು ಮತ್ತು ಭಾರತದ ಮೇಲೆ ಬಿಕ್ಕಟ್ಟು ಬೀರುವ ಪರಿಣಾಮದ ಕುರಿತು ಕೇಂದ್ರ ಸರ್ಕಾರವು ವಿರೋಧ ಪಕ್ಷದ ನಾಯಕರಿಗೆ ಸಭೆಯಲ್ಲಿ ಮಾಹಿತಿ ನೀಡಲಿದೆ ಎಂದು ಮೂಲಗಳು ತಿಳಿಸಿವೆ.
'ಸಂಸತ್ತಿನಲ್ಲಿ ಈ ಬಗ್ಗೆ ಚರ್ಚೆ ನಡೆಸಬೇಕು ಎಂಬುದು ವಿರೋಧ ಪಕ್ಷಗಳ ಆಗ್ರಹವಾಗಿದೆ. ಸಂಸತ್ತಿನಲ್ಲಿ ಚರ್ಚೆ ನಡೆಯದಂತೆ ತಡೆಯುವ ಉದ್ದೇಶದಿಂದಲೇ ಕೇಂದ್ರ ಸರ್ಕಾರವು ಸರ್ವ ಪಕ್ಷಗಳ ಸಭೆ ಕರೆದಿದೆ ಎನ್ನುವುದು ವಿರೋಧ ಪಕ್ಷಗಳ ನಾಯಕರು ಹೇಳಿದ್ದಾರೆ.

