ತಿರುವನಂತಪುರ: ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಕೇರಳದಲ್ಲಿ ಬಿಜೆಪಿಯ ಬಿ-ಟೀಂ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಗಂಭೀರ ಆರೋಪ ಮಾಡಿದ್ದಾರೆ.
ಶನಿವಾರ ಪಿಟಿಐ ಜೊತೆಗಿನ ವಿಡಿಯೊ ಸಂವಾದದಲ್ಲಿ ಮಾತನಾಡಿದ ಅವರು, ಕೇರಳದಲ್ಲಿ ನಮ್ಮನ್ನು ಮಣಿಸಲು ಕಾಂಗ್ರೆಸ್ ಓಲೈಕೆ ರಾಜಕಾರಣಕ್ಕೆ ಇಳಿದಿದೆ.
ಬಹುಸಂಖ್ಯಾತರಲ್ಲಿ ಹಾಗೂ ಅಲ್ಪಸಂಖ್ಯಾತರಲ್ಲಿ ಕೋಮುವಾದಕ್ಕೆ ಕುಮ್ಮಕ್ಕು ನೀಡುವವರ ಬೆಂಬಲ ಪಡೆಯುತ್ತಿದೆ ಎಂದು ಆರೋಪಿಸಿದರು.
ಸಿಪಿಐ ನೇತೃತ್ವ ಎಲ್ಡಿಎಫ್ ಯಾವುದೇ ರೀತಿಯ ಕೋಮುವಾದವನ್ನು ವಿರೋಧಿಸುತ್ತದೆ. ಕೋಮು ಚಟುವಟಿಕೆಗಳಲ್ಲಿ ತೊಡಗಿರುವ ಯಾವುದೇ ಗುಂಪಿನ ಬೆಂಬಲವನ್ನೂ ಈ ಚುನಾವಣೆಯಲ್ಲಿ ಪಡೆಯುವುದಿಲ್ಲ ಎಂದು ಪಿಣರಾಯಿ ಹೇಳಿದರು.
ಶಬರಿಮಲೆ ಚಿನ್ನ ಕಳುವು ಪ್ರಕರಣದ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಇದು ಯಾವುದೇ ಪರಿಣಾಮ ಬೀರುವುದಿಲ್ಲ. ಈ ಅಕ್ರಮದಲ್ಲಿ ಭಾಗಿಯಾಗಿರುವ ಯಾರನ್ನೂ ಬಿಡಲಾಗುವುದಿಲ್ಲ ಎಂದು ಎಚ್ಚರಿಸಿದರು.
ರಾಜ್ಯದ ಶಿಕ್ಷಣ ಸಂಸ್ಥೆಗಳ ಗುಣಮಟ್ಟವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಹೆಚ್ಚಿಸಲು ಕೇರಳದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ನಮ್ಮಿಂದಾಗಿ ಪ್ರಮುಖ ಬದಲಾವಣೆಗಳು ನಡೆದಿವೆ. ವಯನಾಡು ಪ್ರವಾಹ ಪುನರ್ವಸತಿಗೆ ಆರ್ಥಿಕ ನೆರವು ನೀಡುವುದು ಸೇರಿದಂತೆ ಅನೇಕ ವಿಷಯಗಳಲ್ಲಿ ಕೇಂದ್ರ ಸರ್ಕಾರ ಕೇರಳದ ಬಗ್ಗೆ ಅಸಡ್ಡೆಯಾಗಿ ವರ್ತಿಸುತ್ತಿದೆ ಎಂದು ಆರೋಪಿಸಿದರು.
ಕೇರಳದ 140 ವಿಧಾನಸಭಾ ಕ್ಷೇತ್ರಗಳಿಗೆ ಇದೇ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ರಾಜ್ಯದಲ್ಲಿ ಇದುವರೆಗೆ, ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಹಾಗೂ ಸಿಪಿಎಂ ನೇತೃತ್ವದ (ಎಲ್ಡಿಎಫ್) ಮೈತ್ರಿಕೂಟದ ಹಣಾಹಣಿಗೆ ರಾಜ್ಯ ಸಾಕ್ಷಿಯಾಗಿತ್ತು.
ಈ ಬಾರಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟವು ಪ್ರಬಲ ಶಕ್ತಿಯಾಗಿ ಹೊರಹೊಮ್ಮಿದೆ.

