ನಾಗ್ಪುರ: 'ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಲಾಗಿರುವ, ಸ್ವಯಂ ಘೋಷಿತ ದೇವಮಾನವ ಅಶೋಕ್ ಖರಾತ್ ಅವರ ಪ್ರಕರಣವನ್ನು ಪೊಲೀಸ್ ಮಹಾನಿರ್ದೇಶಕರ (ಡಿಜಿಪಿ) ಮೇಲ್ವಿಚಾರಣೆಯಲ್ಲಿ ಉನ್ನತ ಮಟ್ಟದ ತನಿಖೆ ನಡೆಸಲಾಗುತ್ತಿದೆ' ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಭಾನುವಾರ ಹೇಳಿದ್ದಾರೆ.
'ಮರ್ಚೆಂಟ್ ನೌಕಾಪಡೆಯ ನಿವೃತ್ತ ಅಧಿಕಾರಿ' ಎಂದು ಹೇಳಿಕೊಳ್ಳುವ ಅವರು, 'ಕ್ಯಾಪ್ಟನ್' ಎಂದೇ ಗುರುತಿಸಿಕೊಂಡಿದ್ದಾರೆ. ಅವರ ಆಧ್ಯಾತ್ಮಿಕ ಸಲಹೆ ಪಡೆಯಲು ಅನೇಕ ರಾಜಕೀಯ ನಾಯಕರು ಭೇಟಿ ಮಾಡುತ್ತಿದ್ದರು.
'ಮೂರು ವರ್ಷಗಳಲ್ಲಿ ಖರಾತ್ ಅವರು ನನ್ನ ಮೇಲೆ ಅನೇಕ ಬಾರಿ ಅತ್ಯಾಚಾರ ಎಸಗಿದ್ದಾರೆ' ಎಂದು 35 ವರ್ಷದ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ನಾಸಿಕ್ ಪೊಲೀಸರು ಖರಾತ್ ಅವರನ್ನು ಬಂಧಿಸಿದ್ದಾರೆ.
'ಗುಪ್ತಚರ ಇಲಾಖೆ ನೀಡಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಈ ಪ್ರಕರಣವನ್ನು ಭೇದಿಸಿದ್ದಾರೆ. ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ' ಎಂದು ಹೇಳಿದ್ದಾರೆ.
'ಯಾವುದೇ ಕಾರಣವಿಲ್ಲದೆ ಈ ಪ್ರಕರಣವನ್ನು ರಾಜಕೀಯಗೊಳಿಸುವುದು ಸರಿಯಲ್ಲ. ಈ ಆರೋಪಗಳನ್ನು ಸಾಬೀತುಪಡಿಸುವಂತಹ ಸಾಕ್ಷ್ಯಗಳಿದ್ದರೆ ಪೊಲೀಸರಿಗೆ ನೀಡುವ ಮೂಲಕ ತನಿಖೆಗೆ ಸಹಕರಿಸಬೇಕು' ಎಂದು ಮನವಿ ಮಾಡಿದ್ದಾರೆ.

