ತಿರುವಲ್ಲಾ: ಕೇರಳದ ರಾಜಕೀಯದಲ್ಲಿ ಬಿಜೆಪಿಯೊಂದಿಗೆ ರಹಸ್ಯ ಒಪ್ಪಂದಗಳನ್ನು ಮಾಡಿಕೊಳ್ಳುವ ಮೂಲಕ ಚುನಾವಣೆ ಎದುರಿಸುವುದು ಸಿಪಿಐ(ಎಂ) ಅಲ್ಲ, ಕಾಂಗ್ರೆಸ್ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆರೋಪಿಸಿದ್ದಾರೆ.
ಮುಂಬರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಪಾಲಕ್ಕಾಡ್ ಸೇರಿದಂತೆ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಸಿಪಿಐ(ಎಂ) ಹಾಗೂ ಬಿಜೆಪಿಯು ರಹಸ್ಯ ಒಪ್ಪಂದವನ್ನು ಮಾಡಿಕೊಂಡಿದೆ ಎನ್ನುವ ಕಾಂಗ್ರೆಸ್ ಆರೋಪಕ್ಕೆ ಅವರು ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಪಕ್ಷವು ಬಿಜೆಪಿಯ ಬಿ-ಟೀಮ್ ತರಹ ವರ್ತಿಸುವುದು ಎಲ್ಲರಿಗೂ ತಿಳಿದಿದೆ. 2016ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ನೇಮಮ್ ಕ್ಷೇತ್ರದಲ್ಲಿ ಕಳಪೆ ಅಭ್ಯರ್ಥಿಯನ್ನು ನಿಲ್ಲಿಸುವ ಮೂಲಕ ಕಡಿಮೆ ಮತಗಳನ್ನು ಪಡೆದಿತ್ತು. ಇದು ಪರೋಕ್ಷವಾಗಿ ಬಿಜೆಪಿ ಗೆಲುವಿಗೆ ಸಹಾಯ ಮಾಡಿತ್ತು ಎಂದು ಆರೋಪಿಸಿದ್ದಾರೆ.
ಸಿಪಿಐ(ಎಂ) ತರಹದ ಎಡ ಪಕ್ಷಗಳು ಯಾವಾಗಲೂ ಆರ್ಎಸ್ಎಸ್ ಹಾಗೂ ಬಿಜೆಪಿ ವಿರುದ್ಧದ ನಿಲುವು ಹೊಂದಿದ್ದು, ಅದರಲ್ಲಿ ನಾವು ರಾಜಿಯಾಗುವುದಿಲ್ಲ. ಆದರೆ, ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಬಿಜೆಪಿ ಜತೆ ರಹಸ್ಯ ಒಪ್ಪಂದಗಳನ್ನು ಮಾಡಿಕೊಳ್ಳುತ್ತಾರೆ. ಎಎಪಿ ನಾಯಕ ಅರವಿಂದ್ ಕ್ರೇಜಿವಾಲ್ ಬಂಧನವಾದಾಗ ಇವರು ಕೇಂದ್ರದ ವಿರುದ್ಧ ಒಗ್ಗಟ್ಟಾಗಿ ನಿಲ್ಲುವುದನ್ನು ಬಿಟ್ಟು, ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು ಎಂದು ಹೇಳಿದ್ದಾರೆ.
ಇದೀಗ ಬಿಜೆಪಿ ಮತ್ತು ಕಾಂಗ್ರೆಸ್ ಒಟ್ಟಾಗಿ ಚುನಾವಣೆಯಲ್ಲಿ ನಮ್ಮನ್ನು ಸೋಲಿಸಲು ರಣತಂತ್ರ ಮಾಡುತ್ತಿದ್ದಾರೆ. ಆದರೆ, ಜನಾಭಿಪ್ರಾಯದ ಮುಂದೆ ಈ ಒಪ್ಪಂದಗಳು ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.
140 ಸದಸ್ಯ ಬಲದ ಕೇರಳ ವಿಧಾನಸಭಾ ಚುನಾವಣೆಗಳು ಏಪ್ರಿಲ್ 9ರಂದು ಒಂದೇ ಹಂತದಲ್ಲಿ ನಡೆಯಲಿದೆ. ಮೇ 4 ರಂದು ಮತ ಎಣಿಕೆ ಪ್ರಕ್ರಿಯೆ ಜರುಗಲಿದೆ.

