ತಿರುವನಂತಪುರಂ : ಶಬರಿಮಲೆ ಅಯ್ಯಪ್ಪ ದೇಗುಲವನ್ನು ಪ್ರವೇಶಿಸಲು ಮಹಿಳೆಯರಿಗೆ ಅವಕಾಶ ನೀಡಬೇಕೆ ಎಂಬುದಕ್ಕೆ ಸಂಬಂಧಿಸಿದಂತೆ, ಕಾನೂನು ಹಾಗೂ ಸಾಂವಿಧಾನಿಕ ಅಂಶಗಳನ್ನು ಪರಿಶೀಲಿಸಿದ ನಂತರ ಸೂಕ್ತ ಪ್ರತಿಕ್ರಿಯೆ ನೀಡಬೇಕು ಎಂದು ಎಲ್ಡಿಎಫ್ ಸರ್ಕಾರವು ನಿರ್ಧರಿಸಿದೆ ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಎಂ.ವಿ. ಗೋವಿಂದನ್ ಅವರು ಶುಕ್ರವಾರ ತಿಳಿಸಿದ್ದಾರೆ.
'ಸುಪ್ರೀಂ ಕೋರ್ಟ್ ಏಳು ಪ್ರಶ್ನೆಗಳಿಗೆ ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೋರಿದೆ. ಅದರಲ್ಲಿ ಅಯ್ಯಪ್ಪನ ಸನ್ನಿಧಿಯನ್ನು ಪ್ರವೇಶಿಸಲು ಮಹಿಳೆಯರಿಗೆ ಅವಕಾಶ ನೀಡಬೇಕೆ ಎಂಬುದು ಇಲ್ಲ' ಎಂದು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
'ಇದು ಕೇವಲ ಶಬರಿಮಲೆಗೆ ಸಂಬಂಧಿಸಿದ್ದಲ್ಲ. ಸುಪ್ರೀಂ ಕೋರ್ಟ್ನ ಮುಂದಿರುವ ಸಾಂವಿಧಾನಿಕ ವಿಷಯವಾಗಿದ್ದು, ಎಲ್ಲ ಧರ್ಮಗಳಿಗೆ ಸಂಬಂಧಿಸಿದ್ದು' ಎಂದಿದ್ದಾರೆ.
'ಕ್ಷೇತ್ರದಲ್ಲಿ ಪರಂಪರಾಗತವಾಗಿ ಆಚರಿಸುತ್ತಿರುವ ಸಂಪ್ರದಾಯದ ರಕ್ಷಣೆಯ ವಿಷಯಕ್ಕೆ ಸಂಬಂಧಿಸಿದಂತೆ, ಧಾರ್ಮಿಕ ಪಂಡಿತರು ಹಾಗೂ ತಜ್ಞರ ಜೊತೆ ಚರ್ಚಿಸಿದ ನಂತರ ನಿರ್ಧಾರ ತೆಗೆದುಕೊಳ್ಳಬೇಕು ಎಂಬುದು ಪಕ್ಷದ ನಿಲುವಾಗಿದೆ' ಎಂದು ಹೇಳಿದ್ದಾರೆ.
'ಸಿಪಿಎಂ ಸದಾ ಕಾಲ ಭಕ್ತರು ಹಾಗೂ ಭಕ್ತರ ಭಾವನೆಗಳನ್ನು ಗೌರವಿಸಲಿದೆ. ಕಾನೂನು ಮತ್ತು ಸಾಂವಿಧಾನಿಕ ಅಂಶಗಳನ್ನು ಪರಿಶೀಲಿಸಿದ ನಂತರ ಸರ್ಕಾರವು ಸುಪ್ರೀಂ ಕೋರ್ಟ್ಗೆ ಸೂಕ್ತ ಪ್ರತಿಕ್ರಿಯೆ ನೀಡಬಹುದು' ಎಂದಿದ್ದಾರೆ.
ಟಿಡಿಬಿ ವಿರೋಧ:
ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ 10ರಿಂದ 50 ವರ್ಷದ ಒಳಗಿನ ಮಹಿಳೆಯರಿಗೆ ಪ್ರವೇಶ ಕಲ್ಪಿಸುವುದನ್ನು ವಿರೋಧಿಸಿ ದೇವಸ್ಥಾನದ ಆಡಳಿತ ಮಂಡಳಿಯು ಈಚೆಗೆ ನಿರ್ಧಾರ ಕೈಗೊಂಡಿದೆ.
'ದೇವಾಲಯಗಳು, ಅದರ ನಂಬಿಕೆ ಹಾಗೂ ಪದ್ಧತಿಗಳನ್ನು ರಕ್ಷಿಸಲು ಮಂಡಳಿಯು ಬದ್ಧವಾಗಿದೆ. 10ರಿಂದ 50 ವರ್ಷದ ಒಳಗಿನ ಮಹಿಳೆಯರ ಪ್ರವೇಶ ನಿಷೇಧವನ್ನು ಮುಂದುವರಿಸಬೇಕು' ಎಂಬ ನಿರ್ಣಯವನ್ನು ಅಂಗೀಕರಿಸಿದೆ.
ಋತುಸ್ರಾವ ಆಗುವ ವಯಸ್ಸಿನ ಮಹಿಳೆಯರಿಗೆ ಕೂಡ ಶಬರಿಮಲೆ ದೇವಸ್ಥಾನ ಪ್ರವೇಶಿಸುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ 2018ರ ಸೆಪ್ಟೆಂಬರ್ ನಲ್ಲಿ ತೀರ್ಪು ನೀಡಿತ್ತು.
ಈ ತೀರ್ಪಿಗೆ ಸಂಬಂಧಿಸಿದ ಮರುಪರಿಶೀಲನಾ ಅರ್ಜಿಗಳು ಪ್ರಸ್ತುತ ಸುಪ್ರೀಂ ಕೋರ್ಟ್ನ ಪರಿಗಣನೆಯಲ್ಲಿದ್ದು, ಮಾರ್ಚ್ 14ರ ಮೊದಲು ನಿಲುವು ತಿಳಿಸುವಂತೆ ರಾಜ್ಯ ಸರ್ಕಾರ ಸೇರಿದಂತೆ ಸಂಬಂಧಿಸಿದವರಿಗೆ ನ್ಯಾಯಾಲಯವು ಸೂಚಿಸಿತ್ತು.

