ಬರ್ನಾಲ: ಭಾರತ ಹಾಗೂ ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಭಾರತೀಯ ರೈತರನ್ನು ನಾಶ ಮಾಡುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.
ಇಲ್ಲಿ ಕಿಸಾನ್ ಪಂಚಾಯತ್ ರ್ಯಾಲಿಯಲ್ಲಿ ಮಾತನಾಡಿದ ಅವರು, ಕೃಷಿ ಕ್ಷೇತ್ರಕ್ಕೆ ಪ್ರವೇಶ ಅನುಮತಿಸುವ ಕುರಿತು ಎರಡೂ ಕಡೆಯವರ ಭಿನ್ನಾಭಿಪ್ರಾಯದ ಕಾರಣದಿಂದ ಈ ಒಪ್ಪಂದ ನಾಲ್ಕು ತಿಂಗಳು ಸ್ಥಗಿತಗೊಂಡಿತ್ತು ಎಂದು ಹೇಳಿದರು.
ಈ ಸಂದರ್ಭ ನಾಲ್ಕು ತಿಂಗಳು ಮಾಡದ ಕೆಲಸವನ್ನು ಪ್ರಧಾನಿ ಅವರು ಕೇವಲ 15 ನಿಮಿಷಗಳಲ್ಲಿ ಯಾಕೆ ಮಾಡಿದರು ಎಂಬ ಪ್ರಶ್ನೆ ಉದ್ಭವಿಸುತ್ತದೆ ಎಂದು ಅವರು ಹೇಳಿದರು. ಅಲ್ಲದೆ, ಯಾಕೆ ಇದ್ದಕ್ಕಿದ್ದಂತ ವ್ಯಾಪಾರ ಒಪ್ಪಂದ ಮಾಡಲಾಯಿತು ಎಂದು ಅವರು ಪ್ರಶ್ನಿಸಿದರು.
ಪ್ರತಿ ವರ್ಷ ಭಾರತ 9 ಲಕ್ಷ ಕೋಟಿ ರೂಪಾಯಿ ಮೌಲ್ಯದ ಅಮೆರಿಕದ ಉತ್ಪನ್ನಗಳನ್ನು ಖರೀದಿಸುವುದಾಗಿ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಭರವಸೆ ನೀಡಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು.
ಲೋಕಸಭೆಯಲ್ಲಿ ಇತ್ತೀಚೆಗೆ ರಾಷ್ಟ್ರಪತಿ ಭಾಷಣದ ಬಳಿಕ ತನಗೆ ಮಾತನಾಡಲು ಅವಕಾಶ ನೀಡಿಲ್ಲ. ಮಾಜಿ ಸೇನಾ ಮುಖ್ಯಸ್ಥ ಮನೋಜ್ ನರವಣೆ ಅವರ ಆತ್ಮಚರಿತ್ರೆಯ ಕುರಿತು ಮಾತನಾಡಲು ಅವಕಾಶ ನಿರಾಕರಿಸಲಾಯಿತು ಎಂದು ಅವರು ತಿಳಿಸಿದ್ದಾರೆ.
''ಈ ವ್ಯಾಪಾರ ಒಪ್ಪಂದ ಏಕೆ ಸ್ಥಗಿತಗೊಂಡಿದೆ ಎಂಬ ಬಗ್ಗೆ ನಾನು ತಜ್ಞರನ್ನು ಪ್ರಶ್ನಿಸಿದೆ. ಇದಕ್ಕೆ ಭಾರತದ ಕೃಷಿ ಕ್ಷೇತ್ರದಲ್ಲಿ ಅವರ ಉತ್ಪನ್ನಗಳನ್ನು ಮಾರಾಟ ಮಾಡಲು ಅಮೆರಿಕ ಬಯಸಿದೆ. ಆದರೆ ನಮ್ಮ ಸರಕಾರ ನಮ್ಮ ಉತ್ಪನ್ನಗಳನ್ನು ಅಮೆರಿಕದಲ್ಲಿ ಮಾರಾಟ ಮಾಡಲು ಬಯಸುತ್ತಿಲ್ಲ'' ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

