ಮೇನಗುರಿ: ಎಸ್ಐಆರ್ ಮೂಲಕ ಮತದಾರರ ಹಕ್ಕನ್ನು ಕಸಿದುಕೊಂಡಿರುವ ಕೇಂದ್ರ ಸರ್ಕಾರವು, ಮುಂದೆ ಎನ್ಆರ್ಐ ಮೂಲಕ ಪೌರತ್ವವನ್ನು ಕೂಡ ಕಿತ್ತುಕೊಳ್ಳುತ್ತದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಆರೋಪಿಸಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ಮಮತಾ ಬ್ಯಾನರ್ಜಿ ಅವರು ಬುಧವಾರ(ಮಾ.25) ಉತ್ತರ ಬಂಗಾಳದ ಮೇನಗುರಿ ಕ್ಷೇತ್ರದಿಂದ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.
2019ರ ಲೋಕಸಭಾ ಚುನಾವಣೆಯ ಬಳಿಕ ಈ ಭಾಗವು ಬಿಜೆಪಿಯ ಭದ್ರಕೋಟೆಯಾಗಿದೆ.
ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗವು ಎಸ್ಐಆರ್ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳುವ ಮೂಲಕ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿವೆ ಎಂದು ಹೇಳಿದ್ದಾರೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಅನುಸರಿಸುತ್ತಿಲ್ಲ. ಎಸ್ಐಆರ್ನಿಂದ ಮಹಿಳೆಯರು ಸೇರಿದಂತೆ ಹಲವು ಸಮುದಾಯಗಳಿಗೆ ಅನ್ಯಾಯವಾಗುತ್ತಿದೆ. ಅದು ಆರಂಭವಾದ ನಂತರ ಬಂಗಾಳದಲ್ಲೇ 220 ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಇದೇ ವೇಳೆ ತೈಲ ಬೆಲೆ ಏರಿಕೆ ಮತ್ತು ಎಲ್ಪಿಜಿ ಸಿಲಿಂಡರ್ ಕೊರತೆಯ ಕುರಿತು ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.
ಪಶ್ಚಿಮ ಬಂಗಾಳದ 294 ವಿಧಾನಸಭಾ ಕ್ಷೇತ್ರಗಳಿಗೆ ಏ.23 ಮತ್ತು ಏ.29ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಮೇ.4ಕ್ಕೆ ಫಲಿತಾಂಶ ಘೋಷಣೆಯಾಗಲಿದೆ.

