ನೋಯ್ಡಾ: ವೇತನ ಹೆಚ್ಚಳಕ್ಕೆ ಆಗ್ರಹಿಸಿ ವಿವಿಧ ಕಾರ್ಖಾನೆಗಳ ಕಾರ್ಮಿಕರು ಮಂಗಳವಾರವೂ ಪ್ರತಿಭಟನೆ ನಡೆಸಿದರು. ಭಾರಿ ಸಂಖ್ಯೆಯಲ್ಲಿ ಸೇರಿದ್ದ ಕಾರ್ಮಿಕರ ಪ್ರತಿಭಟನೆ ಹಿಂಸಾತ್ಮಕ ಸ್ವರೂಪಕ್ಕೆ ತಿರುಗಿದ್ದು, 300 ಕಾರ್ಮಿಕರನ್ನು ಬಂಧಿಸಲಾಗಿದೆ ಎಂದು ಗೌತಮ್ ಬುದ್ಧ ನಗರ ಪೊಲೀಸ್ ಆಯುಕ್ತ ಲಕ್ಷ್ಮಿ ಹೇಳಿದ್ದಾರೆ.
ಪ್ರತಿಭಟನೆ ವೇಳೆ ವಾಹನಗಳಿಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಿ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಲಾಗಿದೆ. ಈ ಸಂಬಂಧ 300ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಹಿಂಸಾಚಾರವನ್ನು ಪ್ರಚೋದಿಸಿದ ಕೆಲ ಗುಂಪುಗಳನ್ನು ಸಹ ಗುರುತಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಜನರನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.
ಹಿಂಸೆಗೆ ತಿರುಗಿದ ನೋಯ್ಡಾ ಕಾರ್ಮಿಕ ಪ್ರತಿಭಟನೆ: ಹೈ ಅಲರ್ಟ್ ಘೋಷಿಸಿದ ಪೊಲೀಸರು
ಹಿಂಸಾಚಾರದ ಹಿಂದೆ ಯೋಜಿತ ಪಿತೂರಿ ಇದೆ ಎಂದು ಸರ್ಕಾರ ಶಂಕಿಸಿದೆ. ಸಂಘಟಿತ ತಪ್ಪು ಮಾಹಿತಿ ಮತ್ತು ನಕ್ಸಲೀಯ ಚಳುವಳಿಯನ್ನು ಮತ್ತೆ ಪ್ರಚೋದಿಸುವ ಪ್ರಯತ್ನಗಳು ನಡೆದಿವೆಯೇ ಎಂಬ ಬಗ್ಗೆಯೂ ತನಿಖೆ ಮಾಡುತ್ತಿದ್ದೇವೆ. ಕಳೆದ ಎರಡು ದಿನಗಳಲ್ಲಿ ಹಲವು ವಾಟ್ಸ್ ಆಯಪ್ ಗುಂಪುಗಳನ್ನು ರಚಿಸಲಾಗಿದ್ದು, ಅಲ್ಲಿ ಕ್ಯೂಆರ್ ಕೋಡ್ಗಳನ್ನು ಸ್ಕ್ಯಾನ್ ಮಾಡುವ ಮೂಲಕ ಕಾರ್ಮಿಕರನ್ನು ಸೇರಿಸಲಾಗಿದೆ. ಅದರಲ್ಲಿ ಕೆಂಪು ಮೆಣಸಿನ ಪುಡಿಯನ್ನು ತೆಗೆದುಕೊಂಡು ಬೀದಿಗಿಳಿಯುವಂತೆ ಕಾರ್ಮಿಕರಿಗೆ ಪ್ರಚೋದನಕಾರಿ ಸಂದೇಶಗಳನ್ನು ಸಹ ಹಾಕಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ಈ ಕುರಿತು ಪ್ರತಿಕ್ರಿಯಿಸಿದ ಉತ್ತರ ಪ್ರದೇಶದ ಕೈಗಾರಿಕಾ ಸಚಿವ ನಂದ ಗೋಪಾಲ್ ಗುಪ್ತಾ ಅವರು, ಸಮಾಜವಾದಿ ಪಕ್ಷ (ಎಸ್ಪಿ) ಮತ್ತು ಕಾಂಗ್ರೆಸ್ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕದಡಲು 'ಪಿತೂರಿ' ನಡೆಸುತ್ತಿವೆ ಎಂದು ಆರೋಪಿಸಿದರು.
ಈ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ರಾಜ್ಯ ಸರ್ಕಾರವು ವಿರೋಧ ಪಕ್ಷಗಳ ಮೇಲೆ ಆರೋಪ ಹೊರಿಸುವ ಮೂಲಕ ತನ್ನ ವೈಫಲ್ಯವನ್ನು ಮರೆಮಾಡಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

