ಭುವನೇಶ್ವರ: ಜಮೀನು ಕೊಡಿಸುವುದಾಗಿ ನಂಬಿಸಿ ಅಂಗವಿಕಲ ವ್ಯಕ್ತಿಯೊಬ್ಬರಿಗೆ ₹95 ಲಕ್ಷ ವಂಚಿಸಿದ ಆರೋಪದ ಮೇಲೆ ಒಡಿಶಾ ರಾಜ್ಯದ ಐಎಎಸ್ ಅಧಿಕಾರಿಯೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.
ಗೃಹ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಐಎಎಸ್ ಅಧಿಕಾರಿ ಆರಾಧನಾ ದಾಸ್ ವಿರುದ್ಧ ಪ್ರಕರಣ ದಾಖಲಾಗಿದೆ.
ಅಂಗವಿಕಲರಾಗಿರುವ ಕಮಲ್ ಕುಮಾರ್ ಎಂಬುವರಿಗೆ ಕಟಕ್ ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ಜಮೀನು ಕೊಡಿಸುವುದಾಗಿ ಆರಾಧನಾ ಭರವಸೆ ನೀಡಿದ್ದರು. ಇದನ್ನು ನಂಬಿದ ದೂರುದಾರ ಕಮಲ್ ಕುಮಾರ್ ತಮ್ಮ ಪತ್ನಿ ಬೀನಾ ಅವರ ಬ್ಯಾಂಕ್ ಖಾತೆಯಿಂದ ಎರಡು ಪ್ರತ್ಯೇಕ ದಿನಾಂಕಗಳಲ್ಲಿ ಆರಾಧನಾಗೆ ಹಣ ಪಾವತಿಸಿದ್ದರು.
ಹಣ ಪಡೆದ ನಂತರ ಆರಾಧನಾ ಜಮೀನು ಕೊಡಿಸುವಲ್ಲಿ ವಿಫಲರಾಗಿದ್ದರು. ಕಮಲ್ ಹಣವನ್ನು ವಾಪಾಸ್ ಕೇಳಿದ್ದಕ್ಕೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಗಂಭೀರ ಆರೋಪ ಮಾಡಿ ದೂರು ದಾಖಲಿಸಿದ್ದಾರೆ.
ಇಲ್ಲಿನ ಸಿಡಿಎ ಫೇಸ್-2 ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಾಥಮಿಕ ತನಿಖಾ ವರದಿಯಲ್ಲಿ ₹95 ಲಕ್ಷ ಹಣ ವರ್ಗಾವಣೆಯಾಗಿರುವುದು ದೃಢಪಟ್ಟಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಅನುಮತಿಗಾಗಿ ಪತ್ರ: ನಿಯಮಗಳ ಪ್ರಕಾರ ಸರ್ಕಾರಿ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರದ ಅನುಮತಿ ಅಗತ್ಯ. ಈ ಹಿನ್ನೆಲೆಯಲ್ಲಿ ರಾಜ್ಯ ಗೃಹ ಇಲಾಖೆ ಮತ್ತು ಸಾಮಾನ್ಯ ಆಡಳಿತ ಇಲಾಖೆಗೆ ಪೊಲೀಸರು ಪತ್ರ ಬರೆದು ಅಧಿಕಾರಿ ವಿರುದ್ಧ ವಿಚಾರಣೆಗಾಗಿ ಅನುಮತಿ ಕೋರಿದ್ದಾರೆ.

