ಕೋಲ್ಕತ್ತಾ : ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೆ ಕಣಕ್ಕಿಳಿಯಲು ಭಾರತೀಯ ಜನತಾ ಪಕ್ಷ (ಬಿಜೆಪಿ) ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಮತ್ತು ಅಭಿವೃದ್ಧಿ ಕಾರ್ಯಸೂಚಿಯ ಹೆಸರಿನಲ್ಲಿ ಮತ ಯಾಚನೆ ನಡೆಸಲಾಗುವುದು ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಹೇಳಿದ್ದಾರೆ.
ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಅವರು, "ಪಕ್ಷವು ಯಾರನ್ನೂ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸುವುದಿಲ್ಲ. ತೃಣಮೂಲ ಕಾಂಗ್ರೆಸ್ ನ ದುರಾಡಳಿತದ ವಿರುದ್ಧ ಧ್ವನಿ ಎತ್ತುವ ಪ್ರತಿಯೊಬ್ಬರೂ ನಮ್ಮ ನಾಯಕರು. ಚುನಾವಣೆಯ ನಂತರ ಆಯ್ಕೆಯಾದ ಶಾಸಕರಿಂದ ಮುಖ್ಯಮಂತ್ರಿ ಆಯ್ಕೆ ನಡೆಯಲಿದೆ" ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ವಿರುದ್ಧ ನೇರ ಹಣಾಹಣಿ ಇದೆ ಎಂದು ಅವರು ಹೇಳಿದ್ದಾರೆ. "ವ್ಯಕ್ತಿಗತ ಮುಖವನ್ನಿಟ್ಟು ಚುನಾವಣೆಯನ್ನು ಎದುರಿಸುವ ಬದಲು, ಪ್ರಧಾನಿ ಮೋದಿ ಅವರ ಆಡಳಿತ ಮಾದರಿಯನ್ನೇ ನಾವು ಜನರ ಮುಂದೆ ಇಡುತ್ತೇವೆ" ಎಂದರು.
ಇತರ ರಾಜ್ಯಗಳಲ್ಲಿ ಅನುಸರಿಸಿದ ತಂತ್ರವನ್ನು ಬಂಗಾಳದಲ್ಲೂ ಮುಂದುವರಿಸಲಾಗುವುದು ಎಂದು ತಿಳಿಸಿದ ಅವರು, "ದಿಲ್ಲಿ, ಹರ್ಯಾಣ ಮತ್ತು ಒಡಿಶಾದಲ್ಲೂ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೆ ನಾವು ಜಯ ಸಾಧಿಸಿದ್ದೇವೆ. ಇದೇ ಮಾದರಿಯನ್ನು ಇಲ್ಲಿ ಅನುಸರಿಸುತ್ತೇವೆ" ಎಂದು ಹೇಳಿದರು.
ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರನ್ನು ನಂದಿಗ್ರಾಮ ಮತ್ತು ಭಬನಿಪುರ ಕ್ಷೇತ್ರಗಳಿಂದ ಸ್ಪರ್ಧೆಗೆ ಇಳಿಸಿರುವುದು ಅವರು ಮುಖ್ಯಮಂತ್ರಿ ಅಭ್ಯರ್ಥಿ ಎಂಬ ಸೂಚನೆಯೇ ಎಂಬ ಪ್ರಶ್ನೆಗೆ, ಅಂತಿಮ ನಿರ್ಧಾರವನ್ನು ಪಕ್ಷದ ಕೇಂದ್ರ ನಾಯಕತ್ವ ಕೈಗೊಳ್ಳುತ್ತದೆ ಎಂದು ಸಮಿಕ್ ಭಟ್ಟಾಚಾರ್ಯ ಪ್ರತಿಕ್ರಿಯಿಸಿದರು.

