ನವದೆಹಲಿ: ಎಸ್ಐಆರ್ ಕಾರ್ಯದ ವೇಳೆ 7 ನ್ಯಾಯಾಂಗ ಅಧಿಕಾರಿಗಳ ಮೇಲೆ ದಾಳಿ ಹಾಗೂ ಅವರನ್ನು ಕಚೇರಿಯಲ್ಲಿ ಕೂಡಿಹಾಕಿದ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ಹಸ್ತಾಂತರಿಸಲಾಗಿದೆ.
ಎಸ್ಐಆರ್ ಬಳಿಕ ಚುನಾವಣಾ ಆಯೋಗವು ಪ್ರಕಟಿಸಿದ ಮತದಾರರ ಪಟ್ಟಿಯಲ್ಲಿ ಇಲ್ಲದವರು ಸಲ್ಲಿಸಿದ್ದ ಆಕ್ಷೇಪಣೆಗಳ ವಿಚಾರಣೆ ನಡೆಸುತ್ತಿದ್ದ ವೇಳೆ ನ್ಯಾಯಾಂಗ ಅಧಿಕಾರಿಗಳನ್ನು ಘೇರಾವ್ ಹಾಕಿ ಅವರ ಮೇಲೆ ದಾಳಿ ನಡೆಸಲಾಗಿತ್ತು.
ತಡ ರಾತ್ರಿಯವರೆಗೂ ಅವರನ್ನು ಕಚೇರಿಯಲ್ಲಿ ಕೂಡಿಹಾಕಲಾಗಿತ್ತು.
ಸುಪ್ರೀಂ ಕೋರ್ಟ್ ತನ್ನ ಪೂರ್ಣ ಅಧಿಕಾರ ಬಳಸಿ ಪಶ್ಚಿಮ ಬಂಗಾಳ ಪೊಲೀಸರಿಂದ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ಹಸ್ತಾಂತರಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜಾಯ್ ಮಲ್ಯಾ ಬಾಗ್ಚಿ ಮತ್ತು ವಿಫುಲ್ ಎಂ. ಪಂಚೋಲಿ ಅವರ ಪೀಠವು ಘಟನೆ ಕುರಿತು ಸೋಮವಾರ ವಿಚಾರಣೆ ನಡೆಸಿತು.
ಪಶ್ಚಿಮ ಬಂಗಾಳದ ಮಾಲದಾ ಜಿಲ್ಲೆಯಲ್ಲಿ ಏಪ್ರಿಲ್ 1ರಂದು ಘಟನೆ ನಡೆದಿದೆ. ಆಕ್ಷೇಪಣೆಗಳ ವಿಚಾರಣೆ ನಡೆಸಲು ನ್ಯಾಯಾಂಗ ಅಧಿಕಾರಿಗಳನ್ನು ಸುಪ್ರೀಂ ಕೋರ್ಟ್ ನೇಮಿಸಿತ್ತು.
ಈ ಪ್ರಕರಣ ಸಂಬಂಧ ಪೊಲೀಸರು 26 ಮಂದಿಯನ್ನು ಬಂಧಿಸಿದ್ದಾರೆ. ಎನ್ಐಎ ಅಧಿಕಾರಿಗಳು ಇವರನ್ನು ತನಿಖೆಗೆ ಒಳಪಡಿಸಬಹುದು ಎಂದು ಪೀಠ ಹೇಳಿದೆ.
'ಘಟನೆ ನಡೆದ ದಿನದಂದು ಕೋಲ್ಕತ್ತ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ದುಶ್ಯಂತ್ ನಾರಿಯಾಲಾ ಅವರಿಗೆ ಕರೆ ಮಾಡಿದ್ದರು. ಆದರೆ, ದುಶ್ಯಂತ್ ಅವರು ಕರೆ ಸ್ವೀಕರಿಸಲಿಲ್ಲ. ಇದು ಜಿಲ್ಲಾ ಆಡಳಿತದ ವೈಫಲ್ಯ. ಈ ಬಗ್ಗೆ ಮುಖ್ಯ ನ್ಯಾಯಮೂರ್ತಿ ಅವರಲ್ಲಿ ದುಶ್ಯಂತ್ ಅವರು ಕ್ಷಮೆ ಕೇಳಬೇಕು' ಎಂದು ಪೀಠ ಸೂಚಿಸಿತು.

