ನವದೆಹಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಪತ್ನಿಯ ವಿರುದ್ಧ ಮಾಡಿದ್ದ ಆರೋಪ ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕ ಪವನ್ ಖೇರಾಗೆ ತೆಲಂಗಾಣ ಹೈಕೋರ್ಟ್ ಮಂಜೂರು ಮಾಡಿದ್ದ ಒಂದು ವಾರದ ನಿರೀಕ್ಷಣಾ ಜಾಮೀನಿಗೆ ಸುಪ್ರೀಂ ಕೋರ್ಟ್ ಬುಧವಾರ ತಡೆ ನೀಡಿದೆ.
ತೆಲಂಗಾಣ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅಸ್ಸಾಂ ಸರ್ಕಾರ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಎ ಎಸ್. ಚಂದೂರ್ಕರ್ ಅವರಿದ್ದ ಪೀಠ ಪವನ್ ಖೇರಾ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.
'ಅಸ್ಸಾಂನಲ್ಲಿ ದಾಖದ ಪ್ರಕರಣಕ್ಕೆ ತೆಲಂಗಾಣ ಹೈಕೋರ್ಟ್ನಲ್ಲಿ ಜಾಮೀನು ಕೋರಿರುವುದು ಪ್ರಕ್ರಿಯೆಯ ಸಂಪೂರ್ಣ ದುರುಪಯೋಗ' ಎಂದು ಅಸ್ಸಾಂ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪೀಠಕ್ಕೆ ತಿಳಿಸಿದರು.
ಕಾಂಗ್ರೆಸ್ ನಾಯಕ ಪವನ್ ಖೇರಾ ನಿವಾಸದ ಮೇಲೆ ಅಸ್ಸಾಂ ಪೊಲೀಸರಿಂದ ದಾಳಿ
ಅರ್ಜಿಯ ಕುರಿತು ನೋಟಿಸ್ ಜಾರಿ ಮಾಡಿದ ಪೀಠವು, ಹೈಕೋರ್ಟ್ ಆದೇಶಕ್ಕೆ ತಡೆ ನೀಡಲಾಗಿದೆ ಎಂದು ಹೇಳಿದೆ. ಅಲ್ಲದೆ, ಪ್ರಕರಣದ ವಿಚಾರಣೆಯನ್ನು ಮೂರು ವಾರಗಳ ಬಳಿಕ ನಡೆಸುವುದಾಗಿ ತಿಳಿಸಿದೆ.
ಪ್ರಕರಣ ಸಂಬಂಧ ಕೆಲವು ಷರತ್ತುಗಳನ್ನು ವಿಧಿಸಿ ಖೇರಾ ಅವರಿಗೆ ಏಪ್ರಿಲ್ 10ರಂದು ತೆಲಂಗಾಣ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿ ಸಂಬಂಧಪಟ್ಟ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಲು ಒಂದು ವಾರದ ಅವಕಾಶ ನೀಡಿತ್ತು.
ಏಪ್ರಿಲ್ 5 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರು, ಅಸ್ಸಾಂ ಸಿಎಂ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಹಲವು ಪಾಸ್ಪೋರ್ಟ್ಗಳನ್ನು ಮತ್ತು ವಿದೇಶಿ ಆಸ್ತಿಯನ್ನು ಹೊಂದಿದ್ದಾರೆ. ಇದನ್ನು ಶರ್ಮಾ ಚುನಾವಣಾ ಅಫಿಡವಿಟ್ನಲ್ಲಿ ಘೋಷಿಸಿಲ್ಲ ಎಂದು ಆರೋಪಿಸಿದ್ದರು.
ಖೇರಾ ವಿರುದ್ಧ ಗುವಾಹಟಿ ಅಪರಾಧ ವಿಭಾಗದ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ಸೆಕ್ಷನ್ 175 (ಚುನಾವಣೆಗೆ ಸಂಬಂಧಿಸಿದಂತೆ ಸುಳ್ಳು ಹೇಳಿಕೆ), 35 (ಆಸ್ತಿಯ ಖಾಸಗಿ ರಕ್ಷಣೆಯ ಹಕ್ಕು) ಮತ್ತು 318 (ವಂಚನೆ) ಸೇರಿದಂತೆ ಹಲವು ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

