ಮುಂಬೈ: ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆ ಅಪರಾಧಿಗಳಲ್ಲಿ ಓರ್ವನಾದ ಶರದ್ ಕಲಾಸ್ಕರ್ಗೆ ಬಾಂಬೆ ಹೈಕೋರ್ಟ್ ಬುಧವಾರ ಜಾಮೀನು ನೀಡಿದೆ.
ನ್ಯಾಯಮೂರ್ತಿಗಳಾದ ಎ.ಎಸ್.ಗಡ್ಕರಿ ಮತ್ತು ಆರ್.ಆರ್. ಭೋನ್ಸಾಲೆ ಅವರಿದ್ದ ವಿಭಾಗೀಯ ಪೀಠ ಈ ಕುರಿತು ಆದೇಶವನ್ನು ನೀಡಿದೆ.
ವಿಚಾರವಾದಿ ನರೇಂದ್ರ ದಾಭೋಲ್ಕರ್ ಅವರನ್ನು 2013ರಲ್ಲಿ ಪುಣೆಯಲ್ಲಿ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಈ ಪ್ರಕರಣವನ್ನು ಆರಂಭದಲ್ಲಿ ಪುಣೆ ಪೊಲೀಸರು ತನಿಖೆ ನಡೆಸಿದ್ದರು. ನಂತರ ಈ ಕುರಿತ ತನಿಖೆಯ ಹೊಣೆಯನ್ನು ಸಿಬಿಐಗೆ ವಹಿಸಲಾಗಿತ್ತು.
ಪುಣೆ ಸೆಷನ್ಸ್ ನ್ಯಾಯಾಲಯವು ಮೇ 10 ರಂದು ಕಲಾಸ್ಕರ್ ಮತ್ತು ಮತ್ತೋರ್ವ ಆರೋಪಿ ಸಚಿನ್ ಅಂದುರೆ ಎಂಬಾತನನ್ನು ಪ್ರಕರಣದಲ್ಲಿ ದೋಷಿಗಳು ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ಮತ್ತು ತಲಾ 5 ಲಕ್ಷ ರೂ. ದಂಡ ವಿಧಿಸಿತ್ತು.
ಶರದ್ ಕಲಾಸ್ಕರ್ 2024ರಲ್ಲಿ ಸೆಷನ್ಸ್ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಮತ್ತು ಜೀವಾವಧಿ ಶಿಕ್ಷೆ ಅಮಾನತುಗೊಳಿಸುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ.

