ಗೋಗಾಮುಖ್: ಅಸ್ಸಾಂನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನುಸುಳುಕೋರರನ್ನು ರಕ್ಷಿಸಲು ಹೊಸ ಕಾನೂನನ್ನು ಜಾರಿಗೆ ತರಲಿದೆ. ಆದರೆ, ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಧೇಮಾಜಿ ಜಿಲ್ಲೆಯಲ್ಲಿ ಗೋಗಾಮುಖ್ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, 'ಬಹುಸಂಖ್ಯಾತ ಸಮುದಾಯದವರನ್ನು ಅಲ್ಪಸಂಖ್ಯಾತರನ್ನಾಗಿ ಮಾಡುವುದು ಮತ್ತು ನುಸುಳುಕೋರರ ಖಾಯಂ ವೋಟ್ ಬ್ಯಾಂಕ್ ಸೃಷ್ಟಿಸುವುದು ಕಾಂಗ್ರೆಸ್ನ ಪ್ರಮುಖ ಗುರಿಯಾಗಿದೆ' ಎಂದು ಗುಡುಗಿದ್ದಾರೆ.
ಅಸ್ಸಾಂನಲ್ಲಿ ನುಸುಳುಕೋರರನ್ನು ರಕ್ಷಿಸಲು ಹೊಸ ಕಾನೂನು ತರುವುದಾಗಿ ಕಾಂಗ್ರೆಸ್ ನಾಯಕರು ಬಹಿರಂಗವಾಗಿ ಹೇಳುತ್ತಿದ್ದಾರೆ. ಜತೆಗೆ, ನುಸುಳುಕೋರರಿಗೆ ಬಹಿರಂಗವಾಗಿ ಬೆಂಬಲವನ್ನು ನೀಡುತ್ತಿದ್ದಾರೆ ಎಂದು ಎಂದು ಕುಟುಕಿದ್ದಾರೆ.
ದೇಶ ವಿಭಜನೆಯ ಸಮಯದಲ್ಲಿ ಮುಸ್ಲಿಂ ಲೀಗ್ ಮಾಡಿದಂತೆಯೇ ಕಾಂಗ್ರೆಸ್ ಪಕ್ಷವು ದೇಶವನ್ನು ವಿಭಜಿಸಲು ಪ್ರಯತ್ನಿಸುತ್ತಿದೆ. ಬಾಬಾಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನಕ್ಕೂ ಕಾಂಗ್ರೆಸ್ ಚೂರಿ ಹಾಕಿದೆ ಎಂದೂ ಅವರು ಆಕ್ರೋಶ ಹೊರಹಾಕಿದ್ದಾರೆ.
ಅಸ್ಸಾಂನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ, ರಾಜ್ಯದ ಅಸ್ಮಿತೆಯನ್ನು ಕಾಪಾಡಲು 'ಏಕರೂಪ ನಾಗರಿಕ ಸಂಹಿತೆ'ಯನ್ನು (ಯುಸಿಸಿ) ಜಾರಿಗೆ ತರಲಿದ್ದು, ಬುಡಕಟ್ಟು ಜನಾಂಗದವರನ್ನು ರಕ್ಷಣೆ ಮಾಡಲಾಗುತ್ತದೆ ಎಂದು ಮೋದಿ ಭರವಸೆ ನೀಡಿದ್ದಾರೆ.
ಕಳೆದ 10 ವರ್ಷಗಳ ಬಿಜೆಪಿಯ ಆಡಳಿತವು ಅಸ್ಸಾಂನಲ್ಲಿ ಹೊಸ ಯುಗಕ್ಕೆ ಮುನ್ನುಡಿ ಬರೆದಿದೆ. ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಮುಂದುವರಿಯಲು ಮತ್ತು ಆಧುನಿಕ ಮೂಲಸೌಕರ್ಯಗಳನ್ನು ನಿರ್ಮಿಸಲು ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಬೇಕು ಎಂದಿದ್ದಾರೆ.
ಜನರ ಆಶೀರ್ವಾದದೊಂದಿಗೆ ಅಸ್ಸಾಂ ಚುನಾವಣೆಯಲ್ಲಿ ಬಿಜೆಪಿ ಹ್ಯಾಟ್ರಿಕ್ ಸಾಧನೆ ಮಾಡಲಿದೆ. ಆದರೆ, ಕಾಂಗ್ರೆಸ್ ಚುನಾವಣೆಗಳಲ್ಲಿ ಸೋಲಿನ ಶತಕ ಬಾರಿಸಲಿದೆ ಎಂದು ಮೋದಿ ಲೇವಡಿ ಮಾಡಿದ್ದಾರೆ.

