ಕಾಸರಗೋಡು: ಕುಡಿಯುವ ನೀರಿನ ಕೊರತೆ ಎದುರಿಸುತ್ತಿರುವ ಜಿಲ್ಲೆಯ ಎಲ್ಲಾ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆಯಾಗುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಕೊಠಡಿಯಲ್ಲಿ ನಡೆದ ಜಿಲ್ಲಾ ಬರಗಾಲ ಅವಲೋಕನಾ ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಜತೆ ಜಿಲ್ಲಾಧಿಕಾರಿ ಸಮಾಲೋಚನೆ ನಡೆಸಿದರು. ತೀವ್ರ ಕುಡಿಯುವ ನೀರಿನ ಕೊರತೆ ಎದುರಿಸುತ್ತಿರುವ ಪ್ರದೇಶಗಳಲ್ಲಿ, ಟ್ಯಾಂಕರ್ಗಳ ಮೂಲಕ ಕುಡಿಯುವ ನೀರು ಒದಗಿಸಲು ಕ್ರಮ ಕೈಗೊಳ್ಳುವ ಜವಾಬ್ದಾರಿಯನ್ನು ಸ್ಥಳೀಯಾಡಳಿತ ಇಲಾಖೆಯ ಜಂಟಿ ನಿರ್ದೇಶಕರಿಗೆ ವಹಿಸಲಾಗಿದೆ. ಬಾವಿಕ್ಕರ ಯೋಜನೆಯಲ್ಲಿ ವಿದ್ಯುತ್ ಸರಬರಾಜು ಅಡಚಣೆಯನ್ನು ಪರಿಹರಿಸಿ, ಕುಡಿಯುವ ನೀರಿನ ಪೂರೈಕೆಯನ್ನು ತಕ್ಷಣವೇ ಪೂರ್ಣ ಪ್ರಮಾಣದಲ್ಲಿ ಪ್ರಾರಂಭಿಸಲು ಕೇರಳ ಜಲ ಪ್ರಾಧಿಕಾರದ ಕಾರ್ಯನಿರ್ವಾಹಕ ಎಂಜಿನಿಯರ್ಗೆ ಸೂಚನೆ ನೀಡಲಾಯಿತು. ಗುಡ್ಡಗಾಡು ಪ್ರದೇಶದಲ್ಲಿ ಕುಡಿಯುವ ನೀರನ್ನು ಖಚಿತಪಡಿಸಿಕೊಳ್ಳುವಂತೆ ಪರಿಶಿಷ್ಟ ಪಂಗಡ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಲಾಯಿತು. ನೀರು ಪೂರೈಕೆ ಚಟುವಟಿಕೆ ಮೇಲೆ ಯಾವುದೇ ಪರಿಣಾಮ ಬೀರದಂತೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ನಿರ್ದೇಶಿಸಿದರು.
ಜಿಲ್ಲೆಯಲ್ಲಿ ಅಂತರ್ಜಲ ಮಟ್ಟದಲ್ಲಿ ಗಣನೀಯ ಇಳಿಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ, ಜಲಸಂಪನ್ಮೂಲಗಳ ರಕ್ಷಣೆಗೆ ವಿಶೇಷ ಗಮನ ನೀಡಬೇಕು. ವಿದ್ಯಾನಗರ ಸೇರಿದಂತೆ ಪ್ರದೇಶಗಳಲ್ಲಿ ಪಂಪಿಂಗ್ ಅಡಚಣೆಗಳನ್ನು ಪರಿಹರಿಸಲು ಕೆಎಸ್ಇಬಿ ಮತ್ತು ಜಲ ಪ್ರಾಧಿಕಾರದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು. ಹಾನಿಗೊಳಗಾದ ಕೇಬಲ್ಗಳು ಮತ್ತು ವಾಲ್ವ್ಗಳನ್ನು ತುರ್ತಾಗಿ ಬದಲಾಯಿಸುವಂತೆಯೂ ಜಿಲ್ಲಾಧಿಕಾರಿ ಆದೇಶಿಸಿದರು. ಆರೋಗ್ಯ ಕ್ಷೇತ್ರದಲ್ಲಿ ವಿಶೇಷ ಜಾಗರೂಕತೆಯನ್ನು ಕಾಯ್ದುಕೊಳ್ಳಲು ಸಭೆಯು ನಿರ್ದೇಶನ ನೀಡಿತು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಕೆ.ವಿ. ಶ್ರುತಿ, ಸಹಾಯಕ ವೈದ್ಯಾಧಿಕಾರಿ ಅಜಯ್ ಕೆ. ರಾಜ್, ಸಳೀಯಾಡಳಿತ ಇಲಾಖೆಯ ಜಂಟಿ ನಿರ್ದೇಶಕ ಜೇಸನ್ ಮ್ಯಾಥ್ಯೂ ಮೊದಲಾದವರು ಭಾಗವಹಿಸಿದ್ದರು.



