ಪತ್ತನಂತಿಟ್ಟ: ಕೇರಳದಲ್ಲಿ ಎಲ್ಡಿಎಫ್ ಸರ್ಕಾರವನ್ನು ಪದಚ್ಯುತಗೊಳಿಸುವುದಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಅಧಿಕಾರಕ್ಕೆ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.
ಪತ್ತನಂತಿಟ್ಟ ಜಿಲ್ಲೆಯಲ್ಲಿ ನಡೆದ ಬಿಜೆಪಿ ನೇತೃತ್ವದ ಎನ್ಡಿಎ ರ್ಯಾಲಿಯಲ್ಲಿ ಮಾತನಾಡಿದ ಮೋದಿ, ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಎಲ್ಡಿಎಫ್ ಆಡಳಿತಕ್ಕೆ ವಿದಾಯ ಹೇಳುವ ಬಲವಾದ ಮನಸ್ಥಿತಿಯನ್ನು ಹೊಂದಿದ್ದಾರೆ ಎಂದು ತಿಳಿಸಿದ್ದಾರೆ.
ಕ್ರಿಶ್ಚಿಯನ್ ಜನಸಂಖ್ಯೆ ಹೆಚ್ಚಿರುವ ಈಶಾನ್ಯ, ಗೋವಾದಲ್ಲಿ ಅಭಿವೃದ್ಧಿ ಸಾಧಿಸಿದಂತೆ ಕೇರಳದಲ್ಲೂ ಎನ್ಡಿಎ ಅಭಿವೃದ್ಧಿಪಡಿಸುತ್ತದೆ. ಕೇರಳವು ಅಗಾಧ ಸಾಮರ್ಥ್ಯವನ್ನು ಹೊಂದಿದ್ದರೂ, ಅಭಿವೃದ್ಧಿಯ ಓಟದಲ್ಲಿ ಇತರ ರಾಜ್ಯಗಳಿಗಿಂತ ಹಿಂದುಳಿದಿದೆ ಎಂದು ಮೋದಿ ಹೇಳಿದ್ದಾರೆ..
ಕಾಂಗ್ರೆಸ್ ನೇತೃತ್ವದ ಯುಪಿಎ ಆಡಳಿತಗಳಿಗಿಂತ ಎನ್ಡಿಎ ಸರ್ಕಾರ ಕೇರಳದ ಅಭಿವೃದ್ಧಿಗೆ ಐದು ಪಟ್ಟು ಹೆಚ್ಚು ಅನುದಾನ ನೀಡಿದೆ ಎಂದು ಮೋದಿ ಹೇಳಿದ್ದಾರೆ.
ಕೇರಳದ ಅಭಿವೃದ್ಧಿಯಲ್ಲಿ ಭ್ರಷ್ಟಾಚಾರ ಮತ್ತು ಕೋಮುವಾದ ಎರಡು ದೊಡ್ಡ ಅಡೆತಡೆಗಳಾಗಿದ್ದು, ಅವುಗಳನ್ನು ತೊಡೆದು ಹಾಕಲು ಎಲ್ಡಿಎಫ್ ಅನ್ನು ಸೋಲಿಸಬೇಕಾಗಿದೆ ಎಂದು ಅವರು ಕರೆ ನೀಡಿದ್ದಾರೆ.

