ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ರಾಜ್ಯಸಭಾ ಸಂಸದರೂ ಆದ ಕಪಿಲ್ ಸಿಬಲ್, ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಪುರಸ್ಕರಿಸಬೇಕು ಎಂದು ವ್ಯಂಗ್ಯವಾಡಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಪಿಲ್ ಸಿಬಲ್, "ಚುನಾವಣಾ ಆಯೋಗ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಮತ ಹಕ್ಕು ನಿರಾಕರಣೆಯ ಪ್ರಯೋಗ ನಡೆಸುತ್ತಿದೆ. ಮುಖ್ಯ ಚುನಾವಣಾ ಆಯುಕ್ತರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಪುರಸ್ಕರಿಸಲೇಬೇಕು!" ಎಂದು ಛೇಡಿಸಿದ್ದಾರೆ.
"ನನ್ನ ಪ್ರಶ್ನೆ: ಚುನಾವಣೆಯ ಅಗತ್ಯವಾದರೂ ಏನಿದೆ?" ಎಂದೂ ಅವರು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.
ತೀವ್ರವಾಗಿ ಧ್ರುವೀಕರಣಗೊಂಡಿರುವ ಪಶ್ಚಿಮ ಬಂಗಾಳದಲ್ಲಿ ಇಂದು ಮೊದಲ ಹಂತದ ಮತದಾನ ನಡೆಯುತ್ತಿದೆ. ಭ್ರಷ್ಟಾಚಾರ, ನಿರುದ್ಯೋಗದಂತಹ ವಿಷಯಗಳ ಜಾಗವನ್ನು ಗುರುತು, ನಾಗರಿಕತ್ವ ಹಾಗೂ ಮತಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿರುವ ವಿವಾದ ಆಕ್ರಮಿಸಿರುವುದು ಈ ಬಾರಿಯ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ವಿಶೇಷವಾಗಿದೆ.

