ಇಂಫಾಲ: ಪ್ರಾದೇಶಿಕ ಮತ್ತು ರಾಜಕೀಯ ವಿವಾದಗಳಿಂದ ಮಣಿಪುರದ ಸೇನಾಪತಿ ಜಿಲ್ಲೆಯ ಟಿ.ಖುಲ್ಲೆನ್ ಗ್ರಾಮದಲ್ಲಿ ನಾಗಾ ಮತ್ತು ಕುಕಿ ಗುಂಪುಗಳ ನಡುವೆ ಸಂಘರ್ಷ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತೀವ್ರ ಉದ್ವಿಗ್ನತೆ ನಡುವೆ ಎರಡು ಗುಂಪುಗಳ ಮಧ್ಯೆ ಗುಂಡಿನ ಚಕಮಕಿ ನಡೆದಿದ್ದು ಸ್ಥಳೀಯ ಜನರಲ್ಲಿ ಭೀತಿ ಆವರಿಸಿದೆ.
ಗುಂಡಿನ ಚಕಮಕಿಯಲ್ಲಿ ಸಾವು-ನೋವುಗಳು ಸಂಭವಿಸಿದ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಸಂಘರ್ಷ ನಿಯಂತ್ರಿಸಲು ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು ಪರಿಸ್ಥಿತಿ ಅತ್ಯಂತ ಸೂಕ್ಷ್ಮವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಏಪ್ರಿಲ್ 18ರಂದು ಇಬ್ಬರು ನಾಗಾ ನಾಗರಿಕರ ಮೇಲೆ ದಾಳಿ ನಡೆಸಿ ಹತ್ಯೆ ಮಾಡಲಾಗಿತ್ತು. ಇದು ನಾಗಾ ಪ್ರಾಬಲ್ಯದ ಪ್ರದೇಶಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಕಳೆದ ಕೆಲವು ದಿನಗಳಿಂದ ನಾಗಾ ಮತ್ತು ಕುಕಿ ಸಮುದಾಯಗಳ ನಾಗರಿಕ ಸಂಘಟನೆಗಳು ಹಾಗೂ ಬಂಡುಕೋರ ಗುಂಪುಗಳು ಪರಸ್ಪರ ಆರೋಪ ಮಾಡುತ್ತಿದ್ದು ಪರಿಸ್ಥಿತಿ ಹದಗೆಟ್ಟಿದೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.
ಮೈತೇಯಿ ಸಮುದಾಯದ ಪ್ರಾಬಲ್ಯವಿರುವ ಐದು ಕಣಿವೆ ಜಿಲ್ಲೆಗಳು ಹಾಗೂ ನಾಗಾ ಸಮುದಾಯದ ಉಖ್ರುಲ್ ಮತ್ತು ಸೇನಾಪತಿ ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳು, ಮಾರುಕಟ್ಟೆಗಳು ಮತ್ತು ಸಾರಿಗೆ ಸೇವೆಗಳು ಸಂಪೂರ್ಣವಾಗಿ ಬಂದ್ ಆಗಿವೆ.

