ನವದೆಹಲಿ: ಗುಜರಾತಿನ ಜನರು 'ಅನಕ್ಷರಸ್ಥರು' ಎಂಬ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.
ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದ್ದು, ಯಾವಾಗಲೂ ಗುಜರಾತಿನ ಜನರ ಬಗ್ಗೆ ಅಪಾರ ಗೌರವ ಇದೆ' ಎಂದು ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಖರ್ಗೆ, 'ಕೇರಳದಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ತನ್ನ ಹೇಳಿಕೆಗಳನ್ನು ಉದ್ದೇಶಪೂರ್ವಕವಾಗಿ ತಪ್ಪಾಗಿ ಅರ್ಥೈಸಲಾಗಿದೆ. ಹಾಗಿದ್ದರೂ ನಾನು ಪ್ರಾಮಾಣಿಕವಾಗಿ ವಿಷಾದ ವ್ಯಕ್ತಪಡಿಸುತ್ತೇನೆ' ಎಂದಿದ್ದಾರೆ.
'ಗುಜರಾತಿನ ಜನರ ಭಾವನೆಗಳನ್ನು ನೋಯಿಸುವ ಉದ್ದೇಶ ನನ್ನದಾಗಿರಲಿಲ್ಲ. ಅವರ ಬಗ್ಗೆ ಗೌರವ ಇದೆ. ಮುಂದೆಯೂ ಇರುತ್ತದೆ' ಎಂದು ಹೇಳಿದ್ದಾರೆ.
ಕೇರಳದಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ಗುಜರಾತಿನ ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ ಎಂದು ಖರ್ಗೆ ಆರೋಪಿಸಿದ್ದರು.
'ಗುಜರಾತಿನ ಅನಕ್ಷರಸ್ಥ ಜನರನ್ನು ನೀವು ಮೋಸಗೊಳಿಸಬಹುದು. ಆದರೆ ಕೇರಳದ ಜನರನ್ನು ಮೋಸಗೊಳಿಸಲು ಸಾಧ್ಯವಿಲ್ಲ' ಎಂದು ಹೇಳಿದ್ದರು.
'ಕೇರಳದ ಜನರು ಬುದ್ಧಿವಂತರು ಹಾಗೂ ವಿದ್ಯಾವಂತರಾಗಿದ್ದು, ಮೋದಿ ಹಾಗೂ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ಗೆ ಮೋಸ ಮಾಡಲು ಸಾಧ್ಯವಿಲ್ಲ' ಎಂದಿದ್ದರು.

