ಇಂಫಾಲ್: ಮಣಿಪುರದಲ್ಲಿ ಮನೆಯೊಂದರ ಮೇಲೆ ನಡೆದ ಬಾಂಬ್ ದಾಳಿಯಲ್ಲಿ ಇಬ್ಬರು ಪುಟ್ಟ ಮಕ್ಕಳು ಮೃತಪಟ್ಟು, ಅವರ ತಾಯಿ ಗಾಯಗೊಂಡಿರುವ ಘಟನೆ ರಾಜ್ಯದಲ್ಲಿ ಉದ್ವಿಗ್ನತೆಯನ್ನು ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ, ತೌಬಲ್, ಕಾಕ್ಚಿಂಗ್ ಮತ್ತು ಬಿಷ್ಣುಪುರ ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಮೂರು ದಿನಗಳ ಕಾಲ ಸ್ಥಗಿತಗೊಳಿಸಿದೆ.
ದಾಳಿ ನಡೆದ ಬಿಷ್ಣುಪುರ ಜಿಲ್ಲೆಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ.
ರಾಜ್ಯ ಗೃಹ ಇಲಾಖೆಯು ಏಪ್ರಿಲ್ 7ರಂದು ಹೊರಡಿಸಿದ ಆದೇಶದಲ್ಲಿ, 'ತಪ್ಪು ಮಾಹಿತಿ ಹಾಗೂ ಸುಳ್ಳು ವದಂತಿಗಳ ಹರಡುವಿಕೆಯನ್ನು ತಡೆಯಲು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆಯಾಗುವ ಚಟುವಟಿಕೆಗಳನ್ನು ನಿಯಂತ್ರಿಸಲು' ಇಂಟರ್ನೆಟ್ ಸೇವೆಗಳನ್ನು ತಾತ್ಕಾಲಿಕ ಅಮಾನತು ಮಾಡಲಾಗಿದೆ ಎಂದು ಹೇಳಿದೆ. ಮಧ್ಯಾಹ್ನ 2 ಗಂಟೆಯಿಂದ ಈ ನಿರ್ಬಂಧ ಜಾರಿಗೆ ಬಂದಿದೆ.
ಮೈತೈ ಹಾಗೂ ಕುಕಿ ಸಮುದಾಯಗಳ ನಡುವಿನ ಅಶಾಂತಿಯ ಕೇಂದ್ರವಾಗಿರುವ ಮೊಯಿರಾಂಗ್ ನ ಟ್ರೋಂಗ್ಲಾಬಿ ಅವಾಂಗ್ ಲೈಕೈ ಗ್ರಾಮದಲ್ಲಿ ಮಂಗಳವಾರ ಮಧ್ಯರಾತ್ರಿ ಈ ದಾಳಿ ನಡೆದಿದೆ. ಗುಂಪೊಂದು ಮನೆಯ ಮೇಲೆ ಸ್ಫೋಟಕವನ್ನು ಎಸೆದ ಪರಿಣಾಮ, ನಿದ್ರೆಯಲ್ಲಿದ್ದ ಐದು ವರ್ಷದ ಬಾಲಕ ಹಾಗೂ ಆರು ತಿಂಗಳ ಮಗು ಮೃತಪಟ್ಟಿದೆ. ತಾಯಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಘಟನೆ ಬಳಿಕ ಸ್ಥಳೀಯರಲ್ಲಿ ಆಕ್ರೋಶ ಭುಗಿಲೆದ್ದಿದ್ದು, ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿವೆ. ಪೆಟ್ರೋಲ್ ಬಂಕ್ ಸಮೀಪ ಎರಡು ತೈಲ ಟ್ಯಾಂಕರ್ ಗಳು ಮತ್ತು ಒಂದು ಲಾರಿಗೆ ಬೆಂಕಿ ಹಚ್ಚಲಾಗಿದೆ. ಪೊಲೀಸ್ ಠಾಣೆ ಎದುರು ಟೈರ್ ಗಳನ್ನು ಸುಟ್ಟು ಹಾಕಿ, ತಾತ್ಕಾಲಿಕ ಪೊಲೀಸ್ ಹೊರಠಾಣೆಗೂ ಹಾನಿ ಮಾಡಲಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.
ಬಿಷ್ಣುಪುರ-ಚುರಾಚಂದ್ ಪುರ ಗಡಿಯ ಪಿ ಗೆಲ್ಮೋಲ್ ಸಮೀಪದ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಕ್ಯಾಂಪ್ ನತ್ತ ದೊಡ್ಡ ಗುಂಪೊಂದು ನುಗ್ಗಲು ಯತ್ನಿಸಿದೆ. ಗುಂಪನ್ನು ಚದುರಿಸಲು ಭದ್ರತಾ ಸಿಬ್ಬಂದಿ ಗುಂಡು ಹಾರಿಸಿದ್ದು, ಅಶ್ರುವಾಯು ಬಳಸಿದ್ದಾರೆ ಎನ್ನಲಾಗಿದೆ.
ಈ ಗುಂಡಿನ ದಾಳಿಯಲ್ಲಿ ಕನಿಷ್ಠ 19 ಮಂದಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳದಲ್ಲಿದ್ದ ಪತ್ರಕರ್ತರು ಕೂಡ ಗಲಭೆಯ ನಡುವೆ ಸಿಲುಕಿಕೊಂಡಿದ್ದು, ತಮ್ಮ ಸುರಕ್ಷತೆಗಾಗಿ ಹತ್ತಿರದ ಕಾಲುವೆ ಪ್ರದೇಶದಲ್ಲಿ ಆಶ್ರಯ ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು ಎಂದು ತಿಳಿದು ಬಂದಿದೆ.

