ತಂಜಾವೂರು: ಹಿಂದಿ ಹೇರಿಕೆ ಮಾಡುವ ತ್ರಿಭಾಷಾ ಸೂತ್ರವನ್ನು ನಾವು ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರು ಸೋಮವಾರ(ಏ.6) ಹೇಳಿದ್ದಾರೆ.
ಇತ್ತೀಚೆಗೆ ತಮಿಳುನಾಡಿನ ದ್ವಿಭಾಷಾ ಶಿಕ್ಷಣ ಪದ್ದತಿ ಕುರಿತು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ನೀಡಿದ್ದ ಹೇಳಿಕೆಯನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಟೀಕಿಸಿದ್ದರು.
ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ತಿರುವೈಯಾರುನಲ್ಲಿ ಡಿಎಂಕೆ ಅಭ್ಯರ್ಥಿ ದುರೈ ಚಂದ್ರಶೇಖರನ್ ಪರ ಪ್ರಚಾರ ಮಾಡುವ ವೇಳೆ ಉದಯನಿಧಿ ಸ್ಟಾಲಿನ್, ಭಾಷಾ ವಿವಾದದ ಕುರಿತು ಪ್ರತಿಕ್ರಿಯಿಸಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ(ಎನ್ಇಪಿ)ಯನ್ನು ಅಳವಡಿಸಿಕೊಳ್ಳುವಂತೆ ಕೇಂದ್ರ ಸರ್ಕಾರವು ನಮ್ಮ ಮೇಲೆ ಒತ್ತಡ ಹೇರುತ್ತಿದೆ. ಆದರೆ ಎನ್ಇಪಿ ಜಾರಿ ಮಾಡುವುದರಿಂದ ತಮಿಳುನಾಡಿನಲ್ಲಿ ಹಿಂದಿ ಹೇರಿಕೆ ಮಾಡಲು ಅವಕಾಶ ಮಾಡಿಕೊಟ್ಟಂತಾಗುತ್ತದೆ. ಹಾಗಾಗಿ ನಾವು ತಮಿಳು ಮತ್ತು ಇಂಗ್ಲಿಷ್ ಒಳಗೊಂಡಿರುವ ದ್ವಿಭಾಷಾ ಶಿಕ್ಷಣ ಪದ್ದತಿಯನ್ನು ಅನುಸರಿಸುತ್ತೇವೆ ಎಂದು ಹೇಳಿದ್ದಾರೆ.
ಚುನಾವಣೆಯಲ್ಲಿ ದುರೈ ಚಂದ್ರಶೇಖರನ್ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿರುವ ಉದಯನಿಧಿ ಸ್ಟಾಲಿನ್, ಅವರು 50 ಸಾವಿರಕ್ಕೂ ಅಧಿಕ ಮತಗಳಿಂದ ಗೆದ್ದರೆ ಸ್ಟಾಲಿನ್ಗೆ ಹೇಳಿ ಅವರನ್ನು ಮಂತ್ರಿ ಮಾಡುತ್ತೇನೆ ಎಂದು ಆಶ್ವಾಸನೆ ನೀಡಿದ್ದಾರೆ.

