ಲಖನೌ: ವೇತನ ಹೆಚ್ಚಳ ಹಾಗೂ ಇತರ ಬೇಡಿಕೆಗಳಿಗಾಗಿ ಆಗ್ರಹಿಸಿ ನೊಯಿಡಾದ ವಿವಿಧ ಕಾರ್ಖಾನೆಗಳ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನಾಕಾರರು ಹಲವು ವಾಹನಗಳಿಗೆ ಬೆಂಕಿ ಹಚ್ಚಿದ್ದು, ಪೊಲೀಸರತ್ತ ಕಲ್ಲುತೂರಾಟ ನಡೆಸಿದ್ದಾರೆ.
ಪ್ರತಿಭಟನಾಕಾರರನ್ನು ಹತ್ತಿಕ್ಕಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು, ಅಶ್ರುವಾಯು ಶೆಲ್ಗಳನ್ನೂ ಪ್ರಯೋಗಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡಲು ಬಿಗಿ ಭದ್ರತೆಗೆ ವ್ಯವಸ್ಥೆ ಮಾಡಲಾಗಿದೆ. ಸುಮಾರು 50 ಮಂದಿಯನ್ನು ಕಸ್ಟಡಿಗೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಭದ್ರತಾ ವಾಹನಗಳೂ ಸೇರಿದಂತೆ ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಘರ್ಷಣೆ ವೇಳೆ ಗಾಯಗೊಂಡಿರುವ ಪೊಲೀಸರನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಪ್ರತಿಭಟನೆಯಿಂದಾಗಿ ನೊಯಿಡಾದಲ್ಲಿ ಸಂಚಾರ ಅಸ್ತವ್ಯಸ್ಥವಾಗಿದೆ. ಪೊಲೀಸರು ಪರ್ಯಾಯ ಮಾರ್ಗಗಳನ್ನು ಸೂಚಿಸಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ.
ಹಲವು ಖಾಸಗಿ ಕಾರ್ಖಾನೆಗಳ ನೌಕರರು ಕಳೆದ ಕೆಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ವೇತನ ಹೆಚ್ಚಳ, ಹೆಚ್ಚುವರಿ ಅವಧಿಯಲ್ಲಿ ಮಾಡುವ ಕೆಲಸಕ್ಕೆ ದುಪ್ಪಟ್ಟು ಸಂಬಳ, ದೀಪಾವಳಿಗೆ ಬೋನಸ್ ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಪ್ರತಿನಿಧಿಗಳಿಗೆ ಭಾನುವಾರ ಸಲ್ಲಿಸಿದ್ದರು.
ಪ್ರತಿದಿನ 10-12 ತಾಸು ದುಡಿಸಿಕೊಳ್ಳಲಾಗುತ್ತಿದ್ದು, ನಿತ್ಯ ₹ 500-700 ನೀಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು, ಕನಿಷ್ಠ ವೇತನವನ್ನು ಮಾಸಿಕ ₹ 26,000ಕ್ಕೆ ಹೆಚ್ಚಿಸಬೇಕು. ಕಾರ್ಮಿಕ ಕಾನೂನು ಪಾಲನೆಯಾಗಬೇಕು. ವಾರದ ರಜೆ ನೀಡಬೇಕು ಎಂಬ ಮುಖ್ಯ ಬೇಡಿಕೆಗಳಿಗಾಗಿ ಆಗ್ರಹಿಸಿದ್ದಾರೆ.
'ಕಾರ್ಮಿಕರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದೆ' ಎಂದು ಭರವಸೆ ನೀಡಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಗಲಭೆಯಲ್ಲಿ ತೊಡಗದಂತೆ ಎಚ್ಚರಿಕೆಯನ್ನೂ ನೀಡಿದ್ದಾರೆ.

