ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿ ನಡೆದು ಇಂದಿಗೆ (ಏಪ್ರಿಲ್ 22) ಒಂದು ವರ್ಷ.
ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಕಳೆದ ವರ್ಷ ಈ ದಿನದಂದು ನಡೆದ ಭೀಕರ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಹತ್ಯೆಗೀಡಾದ ಮುಗ್ಧ ಜೀವಗಳನ್ನು ನೆನಪಿಸಿಕೊಳ್ಳುತ್ತಿದ್ದೇನೆ.
ಅವರನ್ನು ಎಂದಿಗೂ ಮರೆಯಲಾಗುವುದಿಲ್ಲ ಎಂದು ಬರೆದುಕೊಂಡಿದ್ದಾರೆ.
ದಾಳಿಯಲ್ಲಿ ಕುಟುಂಬಸ್ಥರನ್ನು ಕಳೆದುಕೊಂಡ ಕುಟುಂಬಗಳ ನೋವು ಹೇಳತೀರದು. ಆದರೆ ಕುಟುಂಬಗಳ ಜತೆ ನಾವು ಸದಾ ಇದ್ದೇವೆ ಎಂದು ಹೇಳಿದ್ದಾರೆ.
ಕಪ್ನಿಂದ ಬಂದ ಹಣ ಪಹಲ್ಗಾಮ್ ಸಂತ್ರಸ್ತರಿಗೆ ನೀಡಲು ಸೂರ್ಯಕುಮಾರ್ ನಿರ್ಧಾರ
ಒಂದು ರಾಷ್ಟ್ರವಾಗಿ, ದುಃಖ ಅಥವಾ ದೃಢಸಂಕಲ್ಪದಲ್ಲಿ ಎರಡರಲ್ಲೂ ಜೊತೆ ನಿಲ್ಲುತ್ತೇವೆ. ಭಾರತ ಭಯೋತ್ಪಾದನೆಗೆ ಎಂದಿಗೂ ತಲೆಬಾಗುವುದಿಲ್ಲ. ಭಯೋತ್ಪಾದಕರ ಹೇಯ ಯೋಜನೆಗಳು ಎಂದಿಗೂ ಯಶಸ್ವಿಯಾಗುವುದಿಲ್ಲ ಎಂದು ಕಿಡಿಕಾರಿದ್ದಾರೆ.
2025ರ ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಅಮಾಯಕರ ಪ್ರಾಣ ಪಕ್ಷಿ ಹಾರಿಹೋಗಿತ್ತು. 26 ಮಂದಿ ಮೃತಪಟ್ಟಿದ್ದರೆ, ಕೆಲವರಿಗೆ ಗಾಯಗಳಾಗಿದ್ದವು.
ಈ ದಾಳಿಗೆ ಪ್ರತೀಕಾರವಾಗಿ ಭಾರತವು ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಡೆಸಿತ್ತು. ಈ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮಿರದಲ್ಲಿನ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸುವ ಮೂಲಕ 100ಕ್ಕೂ ಹೆಚ್ಚು ಉಗ್ರರನ್ನು ಕೊಲ್ಲಲಾಯಿತು.

