ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರಿಗೆ ದೆಹಲಿ ಹೈ ಕೋರ್ಟ್ ಬುಧವಾರ ಹೊಸದಾಗಿ ನೋಟಿಸ್ ಜಾರಿಗೊಳಿಸಿದೆ.
ಸಮನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯವು ಕೇಜ್ರಿವಾಲ್ ಅವರನ್ನು ಖುಲಾಸೆ ಗೊಳಿಸಿದ್ದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿರುವ ಅರ್ಜಿಯ ಮೇರೆಗೆ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಈ ನೋಟಿಸ್ ನೀಡಿದ್ದಾರೆ.
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಹಾಜರಾಗಲು ಸೂಚಿಸಿ ಇ.ಡಿ ನೀಡಿದ್ದ ಸಮನ್ಸ್ ಅನ್ನು ಕೇಜ್ರಿವಾಲ್ ಉದ್ದೇಶಪೂರ್ವಕವಾಗಿ ಧಿಕ್ಕರಿಸಿದ್ದಾರೆ ಎಂದು ಆರೋಪಿಸಿ ಇ.ಡಿ ಎರಡು ಪ್ರಕರಣಗಳನ್ನು ದಾಖಲಿಸಿತ್ತು. ಆದರೆ, ವಿಚಾರಣಾ ನ್ಯಾಯಾಲಯವು ಎರಡೂ ಪ್ರಕರಣಗಳಲ್ಲಿ ಕೇಜ್ರಿವಾಲ್ ಅವರನ್ನು ಖುಲಾಸೆಗೊಳಿಸಿದೆ.
ಇದನ್ನು ಪ್ರಶ್ನಿಸಿ ಇ.ಡಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಏಪ್ರಿಲ್ 1ರಂದೇ ಕೇಜ್ರಿವಾಲ್ ಅವರಿಗೆ ಹೈಕೋರ್ಟ್ ನೋಟಿಸ್ ನೀಡಿತ್ತು.
ಆ ನೋಟಿಸ್ ಕೇಜ್ರಿವಾಲ್ ಅವರನ್ನು ತಲುಪಿಲ್ಲ ಎಂಬುದು ನ್ಯಾಯಮೂರ್ತಿಗಳ ಗಮನಕ್ಕೆ ಬಂದಿರುವ ಕಾರಣ ಬುಧವಾರ ಹೊಸದಾಗಿ ನೋಟಿಸ್ ಜಾರಿಗೊಳಿಸಿ, ಮುಂದಿನ ವಿಚಾರಣೆಯನ್ನು ಜುಲೈ 22ಕ್ಕೆ ನಿಗದಿಪಡಿಸಿದ್ದಾರೆ.

