ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಡೈಮಂಡ್ ಹಾರ್ಬರ್ ಕ್ಷೇತ್ರದಲ್ಲಿ ಮತದಾರರನ್ನು ಬೆದರಿಸುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾ ಆಯೋಗವು ತನಿಖೆಗೆ ಆದೇಶಿಸಿದೆ.
ಡೈಮಂಡ್ ಹಾರ್ಬರ್ ವಿಧಾನಸಭಾ ಕ್ಷೇತ್ರದಲ್ಲಿ ಬೈಕ್ಗಳಲ್ಲಿ ಬಂದ ಅಪರಿಚಿತ ವ್ಯಕ್ತಿಗಳ ಗುಂಪೊಂದು ಸ್ಥಳೀಯ ಮತದಾರರಿಗೆ ಬೆದರಿಕೆ ಹಾಕುತ್ತಿರುವ ದೃಶ್ಯಗಳು ವಿಡಿಯೊದಲ್ಲಿ ಸೆರೆಯಾಗಿವೆ. ಈ ವಿಷಯ ಗಮನಕ್ಕೆ ಬಂದ ತಕ್ಷಣ, ಚುನಾವಣಾ ಸಮಿತಿಯು ಡೈಮಂಡ್ ಹಾರ್ಬರ್ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಿಸಿದೆ.
ಬೆದರಿಕೆ ಮತ್ತು ಕಾನೂನುಬಾಹಿರ ಕೃತ್ಯಗಳಿಗೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮತದಾರರಲ್ಲಿನ ಭಯವನ್ನು ಹೋಗಲಾಡಿಸಲು ಮತ್ತು ಇಂತಹ ಬೆದರಿಕೆಗಳನ್ನು ತಡೆಯಲು ಆಯೋಗವು ಕ್ರಮ ಕೈಗೊಳ್ಳುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಘಟನೆಗೂ ಮುನ್ನವೇ, ಕರ್ತವ್ಯ ಲೋಪ ಮತ್ತು ಪಕ್ಷಪಾತದ ಆರೋಪದ ಮೇಲೆ ಡೈಮಂಡ್ ಹಾರ್ಬರ್ನ ಐವರು ಅಧಿಕಾರಿಗಳನ್ನು ಚುನಾವಣಾ ಆಯೋಗದ ನಿರ್ದೇಶನದಂತೆ ಅಮಾನತುಗೊಳಿಸಿ ಶಿಸ್ತು ಕ್ರಮ ಜರುಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಏಪ್ರಿಲ್ 29 ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, ಸೋಮವಾರ ಸಂಜೆ ಪ್ರಚಾರ ಕಾರ್ಯ ಅಂತ್ಯಗೊಳ್ಳಲಿದೆ. ಮೇ 4ರಂದು ಫಲಿತಾಂಶ ಹೊರಬೀಳಲಿದೆ.

