ನವದೆಹಲಿ: ಸುಪ್ರೀಂ ಕೋರ್ಟ್ನ ಆದೇಶದಂತೆ ಮತದಾರರ ಪಟ್ಟಿಯ ವಿಶೇಷ ಪರಷ್ಕರಣೆ (ಎಸ್ಐಆರ್ ) ಮೇಲ್ಮನವಿ ನ್ಯಾಯಮಂಡಳಿಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ವಕೀಲರೊಬ್ಬರು ಪ್ರತಿಪಾದಿಸಿದ್ದು, ಈ ಕುರಿತು ಕಲ್ಕತ್ತ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಿಂದ ವರದಿ ಕೋರಲಾಗುವುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದೆ.
ಚುನಾವಣಾ ಆಯೋಗ ಎಸ್ಐಆರ್ ಪ್ರಕ್ರಿಯೆ ನಂತರ ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಅಥವಾ ತೆಗೆದು ಹಾಕಿದ್ದವರ ವಿರುದ್ಧ ಸಲ್ಲಿಕೆಯಾದ ಮೇಲ್ಮನವಿಗಳ ವಿಚಾರಣೆಗಾಗಿ ಮೇಲ್ಮನವಿ ನ್ಯಾಯಮಂಡಳಿಗಳನ್ನು ರಚಿಸಲಾಗಿದೆ.
ನ್ಯಾಯಮಂಡಳಿಗಳು ಕಕ್ಷಿದಾರರನ್ನು ಪ್ರತಿನಿಧಿಸಲು ವಕೀಲರಿಗೆ ಅವಕಾಶ ನೀಡುತ್ತಿಲ್ಲ. ಭೌತಿಕ ಅರ್ಜಿಗಳನ್ನು ಸ್ವೀಕರಿಸುತ್ತಿಲ್ಲ. ಆನ್ಲೈನ್ ಅರ್ಜಿಗಳನ್ನು ಮಾತ್ರ ಸ್ವೀಕರಿಸಲಾಗುತ್ತಿದೆ ಎಂದು ಹಿರಿಯ ವಕೀಲ ದೇವದತ್ ಕಾಮತ್ ಎಂಬುವವರು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರ ಪೀಠದ ಮುಂದೆ ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠವು, ಇದು ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿತು.
'ಇದು ಒಂದು ವೃತ್ತಿಪರ ಕಾರ್ಯತಂತ್ರವಾಗಿದೆ. ಪ್ರತಿದಿನ ನೀವು ಒಬ್ಬರ ನಂತರ ಮತ್ತೊಬ್ಬರು ಬರುತ್ತಿದ್ದೀರಿ' ಎಂದು ಸಿಜೆಐ ಹೇಳಿದರು.
ತಾವು ಅರ್ಜಿಗೆ ಸಂಬಂಧಿಸಿದಂತೆ ವಿನಂತಿ ಮಾಡುತ್ತಿದ್ದೇವೆ. ವಿಷಯವನ್ನು ಪಟ್ಟಿ ಮಾಡಿ ಎಂದು ಕಾಮತ್ ಪೀಠವನ್ನು ಕೋರಿದರು. ಪರಿಶೀಲಿಸುವುದಾಗಿ ಪೀಠವು ತಿಳಿಸಿತು.
ಮೇಲ್ಮನವಿ ನ್ಯಾಯಮಂಡಳಿಗಳ ಅಸಮರ್ಪಕ ಕಾರ್ಯನಿರ್ವಹಣೆಯ ಬಗ್ಗೆ ಪತ್ರಿಕೆಗಳು ವರದಿ ಮಾಡಿದೆ. ಸುಪ್ರೀಂ ಕೋರ್ಟ್ ಆದೇಶಗಳ ಹೊರತಾಗಿಯೂ ಅವು ಕಾರ್ಯನಿರ್ವಹಿಸುತ್ತಿಲ್ಲ ಎಂದು ಕಾಮತ್ ಪೀಠದ ಮುಂದೆ ಅರುಹಿದರು.
ಇದಕ್ಕೆ, 'ನಾವು ಇಂದೇ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಂದ ವರದಿಯನ್ನು ಪಡೆಯುತ್ತೇವೆ' ಎಂದು ಸಿಜೆಐ ತಿಳಿಸಿದರು.
ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗಳು ಏಪ್ರಿಲ್ 23 ಮತ್ತು 29 ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ಮೇ 4 ರಂದು ಮತ ಎಣಿಕೆ ನಡೆಯಲಿದೆ.

